ಬೈಂದೂರು ಕ್ಷೇತ್ರ ಸಾಕಷ್ಟು ಅಭಿವೃದ್ಧಿ: ಕಿರಣ್ ಕೊಡ್ಗಿ
ವಂಡ್ಸೆ ಮಹಾಶಕ್ತಿ ಕೇಂದ್ರದ ಪೇಜ್ ಪ್ರಮುಖರ ಸಭೆ
ಬೈಂದೂರು, ಎ.27: ಸಂಸದರಾಗಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಗ್ರಾಮೀಣ ರಸ್ತೆ ಅಭಿವೃದ್ಧಿ, ಅಗತ್ಯ ಸೇತುವೆ, ಕಿಂಡಿ ಅಣೆಕಟ್ಟು ಹಾಗೂ ಬಂದರು ನಿರ್ಮಾಣ ಕಾಮಗಾರಿಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ಒದಗಿಸಿದ್ದಾರೆ ಎಂದು ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಹೇಳಿದ್ದಾರೆ.
ಬೈಂದೂರು ವಿಧಾನಸಭಾ ವ್ಯಾಪ್ತಿಯ ವಂಡ್ಸೆ ಮಹಾಶಕ್ತಿ ಕೇಂದ್ರದ ಬಿಜೆಪಿ ಪೇಜ್ ಪ್ರಮುಖರ ಸಭೆಯನ್ನು ವಂಡ್ಸೆ ಸಕಲ ಸಭಾಭವನದಲ್ಲಿ ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಹೀಗಾಗಿ ಅವರನ್ನು ಮತ್ತೊಮ್ಮೆ ಬೈಂದೂರು ಕ್ಷೇತ್ರ ದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಮೂಲಕ ಗೆಲ್ಲಿಸುವಂತೆ ಕರೆ ನೀಡಿದರು.
ಬಿ.ವೈ.ರಾಘವೇಂದ್ರ ಅವರಿಗೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆಯಿದೆ. ವಾರಾಹಿ ಯೋಜನೆಯ ಮೂಲಕ ಮನೆ ಮನೆ ಕುಡಿಯುವ ನೀರು ಕಲ್ಪಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಸಂಸದರಾಗಿ ಬಿ.ವೈ. ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಸರ್ವಾಂಗೀಣ ಉನ್ನತಿಗೆ ಪೂರಕವಾಗಿದೆ ಎಂದು ಹೇಳಿದರು.
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಬೂತ್ ಕಡೆಗೆ ಸಮೃದ್ಧ ನಡಿಗೆ ಮೂಲಕ ಕ್ಷೇತ್ರದಲ್ಲಿ ವಿಶೇಷ ಸಂಚಲನ ಮೂಡಿಸಿದ್ದಾರೆ. ಕ್ಷೇತ್ರವು ಅಭಿವೃದ್ಧಿಯಲ್ಲಿ ಮಾದರಿಯಾಗಬೇಕು ಎನ್ನುವ ನೆಲೆಯಲ್ಲಿ ಬೂತ್ ನಡಿಗೆಯನ್ನು ಯಶಸ್ವಿ ಗೊಳಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಮೂಕಾಂಬಿಕಾ ಕಾರಿಡಾರ್ ಮೂಲಕ ಸಮೃದ್ಧ ಬೈಂದೂರು ಸಾಕಾರ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಈ ಬಾರಿ ಬೂತ್ ಕಡೆಗೆ ಸಮೃದ್ಧ ನಡಿಗೆ ಯಶಸ್ವಿಯಾಗಿ ಪೂರೈಸಿದ್ದೇವೆ. ಪೇಜ್ ಪ್ರಮುಖರು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಪ್ರಮುಖರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರಾಘವೇಂದ್ರ ಉಪ್ಪುಂದ ಮೊದಲಾದವರು ಪೇಜ್ ಪ್ರಮುಖರ ನಿರ್ದಿಷ್ಟ ಜವಾಬ್ದಾರಿಯ ಬಗ್ಗೆ ಮಾರ್ಗದರ್ಶನ ನೀಡಿದರು. ಮುಖಂಡರು, ಕಾರ್ಯ ಕರ್ತರು, ಪೇಜ್ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.