ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಗೆ ಜೈಲುಶಿಕ್ಷೆ, ದಂಡ
ಮಂಗಳೂರು, ಆ.7: ಸ್ನೇಹದ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಆಕೆಯಿಂದ 30.05 ಪವನ್ ಚಿನ್ನಾಭರಣಗಳನ್ನು ಪಡೆದಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್ಟಿಎಸ್ಸಿ-1) ನ್ಯಾಯಾಧೀಶೆ ಮಂಜುಳಾ ಇಟ್ಟಿ 3 ವರ್ಷ ಶಿಕ್ಷೆ, ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಕಡೆಕಾರ್ ನಿವಾಸಿ ರೋಶನ್ ಡಿಸೋಜಾ ಯಾನೆ ರೋಶನ್ ಫೆರ್ನಾಂಡಿಸ್ (31) ಶಿಕ್ಷೆಗೊಳಗಾದ ಆರೋಪಿ.
ಘಟನೆಯ ವಿವರ: ನಗರದ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯು 2015ರ ನ.16ರಂದು ಬೆಳಗ್ಗೆ ಬಸ್ನಿಂದ ಇಳಿದು ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿ ರೋಶನ್ ತಾನು ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದು ಇನ್ಫೋಸಿಸ್ನಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿದ್ದ.
ಹೀಗೆ ನಂಬಿಕೆ ಮೂಡಿಸುವಲ್ಲಿ ಯಶಸ್ವಿಯಾಗಿದ್ದ ಆರೋಪಿಯು ಬಳಿಕ ಬಾಲಕಿಯನ್ನು ಮಂಗಳೂರಿನ ಹೊಟೇಲ್, ಮಾಲ್ಗಳಿಗೆ ಕರೆದು ಕೊಂಡು ಹೋಗಿದ್ದ. ಮನೆಯಲ್ಲಿ ತಿಳಿಸಿದರೆ ನಮ್ಮ ನಡುವಿನ ಸ್ನೇಹಕ್ಕೆ ತೊಂದರೆಯಾಗುತ್ತದೆ. ಮನೆಯವರು ಅಡ್ಡಿ ಮಾಡುತ್ತಾರೆ ಎಂದು ಹೇಳಿರುವುದಾಗಿ ಪೊಲೀಸರು ಚಾರ್ಚ್ಶೀಟ್ನಲ್ಲಿ ಉಲ್ಲೇಖಿಸಿದ್ದರು.
2015ರ ಡಿ.28ರಂದು ಆಕೆಯಿಂದ ಉಪಾಯವಾಗಿ 86.07 ಗ್ರಾಂ ತೂಕದ ಚಿನ್ನಾಭರಣಗಳನ್ನು ಪಡೆದುಕೊಂಡಿದ್ದ. 2016ರ ಮಾ.12ರಂದು ಬಾಲಕಿಯ ಅಜ್ಜಿಯ ಮನೆಯ ಬಳಿಗೆ ತೆರಳಿ ಬಾಲಕಿಯ ಮೂಲಕ 34.01 ಗ್ರಾಂ ಮೌಲ್ಯದ ಚಿನ್ನಾಭರಣಗಳನ್ನು ಪಡೆದುಕೊಂಡಿದ್ದ. 2016ರ ಮಾ.30ರಂದು ಪೂ.11:30ಕ್ಕೆ ಕದ್ರಿಪಾರ್ಕ್ಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎಂದು ಆರೋಪಿಸಲಾಗಿತ್ತು.
ಆ ದಿನ ಬಾಲಕಿ ಮನೆಗೆ ತಲುಪುವಾಗ ತಡವಾಗಿತ್ತು. ಆ ಬಗ್ಗೆ ಮನೆಯವರು ಪ್ರಶ್ನಿಸಿದಾಗ ಬಾಲಕಿ ನಡೆದಿರುವ ವಿಚಾರ ಗಳನ್ನು ಬಾಯ್ಬಿಟ್ಟಿದ್ದಳು. ಮನೆಯವರು ಆರೋಪಿಯ ಬಗ್ಗೆ ಇತರರಲ್ಲಿ ವಿಚಾರಿಸಿದಾಗ ಆತ ಸಾಫ್ಟ್ವೇರ್ ಇಂಜಿನಿಯರ್ ಆಗಿರಲಿಲ್ಲ, ಬದಲಾಗಿ ಕ್ಯಾಟರಿಂಗ್ವೊಂದರಲ್ಲಿ ಸಪ್ಲೈಯರ್ ಆಗಿದ್ದ ಎಂಬುದು ಗೊತ್ತಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ಗಳಾದ ಅಶೋಕ್ ಪಿ. ಮತ್ತು ಕೆ.ಆರ್.ಗೋಪಿಕೃಷ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ಪೊಕ್ಸೊ ಕಾಯ್ದೆಯ ಕಲಂ 8ರಂತೆ 3 ವರ್ಷ ಸಾದಾ ಸಜೆ, 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಸಾದಾ ಸಜೆ, ಪೊಕ್ಸೊ ಕಾಯ್ದೆಯ ಕಲಂ 12ರಂತೆ ಒಂದು ವರ್ಷ ಸಾದಾ ಸಜೆ, 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ತಿಂಗಳ ಸಾದಾ ಸಜೆ, ಭಾರತೀಯ ದಂಡ ಸಂಹಿತೆಯ ಕಲಂ 420ರಂತೆ 3 ವರ್ಷ ಸಾದಾ ಸಜೆ, 5,000 ರೂ.ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ತಿಂಗಳು ಸಾದಾ ಸಜೆ ವಿಧಿಸಿ, ಸಂತ್ರಸ್ತ ಬಾಲಕಿಗೆ 50,000 ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.