ಮಂಗಳೂರು ಪೊಲೀಸರಿಂದ ಹಿರಿಯ ನಾಗರಿಕರ ಭೇಟಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಸೂಚನೆಯ ಮೇರೆಗೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳ ಪೊಲೀಸ್ ಅಧಿಕಾರಿಗಳು ರವಿವಾರ ಹಿರಿಯ ನಾಗರಿಕರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಕೆಲವು ಮಂದಿ ಹಿರಿಯ ನಾಗರಿಕರು ಸಮಸ್ಯೆಗಳನ್ನು ತೋಡಿಕೊಂಡ ಹಿನ್ನೆಲೆ ಯಲ್ಲಿ ಪೊಲೀಸ್ ಆಯುಕ್ತರು ಎಲ್ಲಾ ಠಾಣೆಗಳ ಅಧಿಕಾರಿಗಳಿಗೆ ಹಿರಿಯ ನಾಗರಿಕರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸುವಂತೆ ಸೂಚಿಸಿದ್ದರು. ಅದರಂತೆ ಆಯುಕ್ತಾಲಯ ವ್ಯಾಪ್ತಿಯಲ್ಲಿ ೪೩೮ ಮನೆಗಳಿಗೆ ತೆರಳಿ ಅಲ್ಲಿ ವಾಸವಾಗಿದ್ದ ಹಿರಿಯ ನಾಗರಿಕರನ್ನು ಭೇಟಿ ಮಾಡಿದ್ದರು. ಅದರಲ್ಲೂ ಉರ್ವ ಠಾಣಾ ವ್ಯಾಪ್ತಿಯೊಂದರಲ್ಲೇ 100 ಮನೆಗಳಿಗೆ ಪೊಲೀಸರು ಭೇಟಿ ಮಾಡಿರುವುದಾಗಿ ತಿಳಿದು ಬಂದಿದೆ.
ಹಿರಿಯ ನಾಗರಿಕರು ಪೊಲೀಸ್ ಅಧಿಕಾರಿಗಳೊಂದಿಗೆ ಅನೇಕ ಸಮಸ್ಯೆಗಳನ್ನು ಹೇಳಿಕೊಂಡಿದ್ದರು. ಕೆಲವು ಮಂದಿ ಹಿರಿಯ ನಾಗರಿಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳ ಈ ಕ್ರಮದ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಿರಿಯ ನಾಗರಿಕರಲ್ಲೂ ಭದ್ರತೆಯ ಭಾವನೆ ಮೂಡಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.