ತುಳು, ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ನಿಧನ

ಮಂಗಳೂರು: ತುಳು, ಕನ್ನಡ ವಿದ್ವಾಂಸರಾಗಿದ್ದ ಡಾ. ವಾಮನ ನಂದಾವರ (81) ಅವರು ಶನಿವಾರ ಬೆಳಿಗ್ಗೆ ನಿಧನರಾದರು.
ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು.
ಹೆಸರಾಂತ ಜಾನಪದ ವಿದ್ವಾಂಸರಾಗಿದ್ದ ಡಾ. ವಾಮನ ಅವರು ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ್ದಲ್ಲದೇ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.
ಡಾ. ವಾಮನ ನಂದಾವರ ಪರಿಚಯ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಂದಾವರದಲ್ಲಿ ಬಾಬು ಬಾಳೆಪುಣಿ, ಪೂವಮ್ಮರವರ ಮಗನಾಗಿ 1944ರ ನವೆಂಬರ್ 15ರಂದು ಅವರು ಜನಿಸಿದರು. ಬಂಟ್ವಾಳ ತಾಲ್ಲೂಕಿನ ಮುದುಂಗಾರು ಕಟ್ಟೆ ಸರಕಾರಿ ಎಲಿಮೆಂಟರಿ ಶಾಲೆ, ಪಾಣೆಮಂಗಳೂರಿನ ಎಸ್.ವಿ.ಎಸ್ ಹೈಯರ್ ಎಲಿಮೆಂಟರಿ ಶಾಲೆ, ಕುರ್ನಾಡಿನ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ, ಕುರ್ನಾಡಿನ ಬೋರ್ಡು ಹೈಸ್ಕೂಲು, ಕೋಟೆಕಾರಿನ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾಭ್ಯಾಸವನ್ನು ಮಾಡಿದ ಬಳಿಕ ಮಂಗಳೂರಿನ ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಬಿ.ಎಸ್ಸಿ ಪದವಿ ಪಡೆದರು ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿ.ಇಡಿ ಪದವಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಎಂ.ಎ (ಕನ್ನಡ), ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಎಡ್ ಪದವಿ ಪಡೆದಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಎ.ವಿವೇಕ ರೈಯವರ ಮಾರ್ಗದರ್ಶನದಲ್ಲಿ 'ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದರು.
ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಹಾಯಕ ಅಧ್ಯಾಪಕ, ಸೈಂಟ್ ಆನ್ಸ್ ಪ್ರೌಢಶಾಲೆಯ ಸಹಾಯಕ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಬಳಿಕ ಸೈಂಟ್ ಆನ್ಸ್ ಮಹಿಳಾ ಶಿಕ್ಷಕ-ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, ಸಹ್ಯಾದ್ರಿ ಶಿಕ್ಣಣ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲರಾದರು. ಇಂದಿರಾ ಗಾಂಧಿ ರಾಷ್ತ್ರೀಯ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಮಾರ್ಗದರ್ಶಕರಾಗಿ ದುಡಿದ ಅವರು, ಪಿಲಿಕುಳ ನಿಸರ್ಗಧಾಮದ ಯೋಜನಾಧಿಕಾರಿಯಾಗಿ ಕರ್ತವ್ಯ ಸಲ್ಲಿಸಿದ್ದರು. ಮಂಗಳೂರು ದರ್ಶನ ಯೋಜನೆದ ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.
ಮಧ್ಯಾಹ್ನ 2 ಗಂಟೆಗೆ ಉರ್ವಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಮಧ್ಯಾಹ್ನ 1 ಗಂಟೆ ತನಕ ಪಾರ್ಥಿವ ಶರೀರವು ಉಳಾಯಿಬೆಟ್ಟು ಅವತಾರ್ ವಿಶ್ರಾಂತಿ ಮನೆಯಲ್ಲಿರುತ್ತದೆ ಎಂದು ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.