ಅಯೋಧ್ಯೆ: ರಾಮಮಂದಿರದಲ್ಲಿ ಪೂಜೆ ಸಲ್ಲಿಸಲು ಬಂದಿದ್ದ ಇಬ್ಬರು ಮೃತ್ಯು

PC : ANI
ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ಪೂಜೆ ಸಲ್ಲಿಸಲು ಬಂದಿದ್ದ ಹರ್ಯಾಣದ ಇಬ್ಬರು ಭಕ್ತರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಸಾವು ಕಾಲ್ತುಳಿತದಿಂದ ಸಂಭವಿಸಿದೆ ಎಂಬ ಸಾಮಾಜಿಕ ಮಾಧ್ಯಮದ ಪ್ರತಿಪಾದನೆಯನ್ನು ಪೊಲೀಸರು ನಿರಾಕರಿಸಿದ್ದಾರೆ.
ದೇವಾಲಯಕ್ಕೆ ಭೇಟಿ ನೀಡಲು ಸರದಿಯಲ್ಲಿ ಕಾಯುತ್ತಿದ್ದ ಸಂದರ್ಭ ಓರ್ವ ಮಹಿಳೆ ಹಾಗೂ ಪುರುಷ ಪ್ರಜ್ಞೆ ಕಳೆದುಕೊಂಡು ಬಿದ್ದರು. ಅವರಿಬ್ಬರನ್ನು ಕೂಡಲೇ ಶ್ರೀರಾಮ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅವರು ಅಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರೂ 60 ವರ್ಷಕ್ಕಿಂತ ಮೇಲ್ಪಟ್ಟವರು. ಅವರ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಕಾಲ್ತುಳಿತಕ್ಕೆ ಸಿಲುಕಿ ಇಬ್ಬರು ಭಕ್ತರು ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಮಾಧ್ಯಮದ ಕೆಲವು ವೇದಿಕೆಗಳ ಗುಂಪುಗಳು ಹಾಗೂ ಕೆಲವರು ಪ್ರತಿಪಾದಿಸಿದ್ದಾರೆ. ಇದು ತಪ್ಪು ದಾರಿಗೆಳೆಯುವ ಪ್ರಯತ್ನ. ಅಂತಹ ಯಾವುದೇ ಘಟನೆ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.