ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ-ಪ್ರಕರಣ: ಆರೋಪಿಗೆ ಮರಣ ದಂಡನೆ ಶಿಕ್ಷೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರಕಾರ

ಆರೋಪಿ ಸಂಜಯ್ ರಾಯ್
ಕೋಲ್ಕತ್ತಾ: ಆರ್ಜಿಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ದೋಷಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರಕಾರವು ಹೈಕೋರ್ಟ್ ಮೆಟ್ಟಿಲೇರಿದ್ದು, ಆತನಿಗೆ ಮರಣ ದಂಡನೆ ವಿಧಿಸಬೇಕು ಎಂದು ಮನವಿ ಮಾಡಿದೆ.
ಕೋಲ್ಕತ್ತಾ ನಗರ ಪೊಲೀಸ್ ಇಲಾಖೆಗೆ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತಿದ್ದ ಸಂಜಯ್ ರಾಯ್ ನನ್ನು ದೋಷಿ ಎಂದು ಘೋಷಿಸಿದ್ದ ಸೆಷನ್ಸ್ ನ್ಯಾಯಾಲಯವು, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಪ್ರಕರಣವು ಅಪರೂಪದಲ್ಲೇ ಅಪರೂಪದ ಪ್ರಕರಣವಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದರು.
ಈ ಪ್ರಕರಣವನ್ನು ತಪ್ಪಾಗಿ ನಿಭಾಯಿಸಲಾಗುತ್ತಿದೆ ಎಂಬ ವಾಗ್ದಾಳಿಗೆ ಗುರಿಯಾಗಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವು, ನ್ಯಾಯಾಲಯದ ಈ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೋಲ್ಕತ್ತಾ ಪೊಲೀಸರು ಈ ಪ್ರಕರಣದಲ್ಲಿ ಮರಣ ದಂಡನೆಯನ್ನು ಖಾತರಿಗೊಳಿಸುತ್ತಿದ್ದರು ಎಂದು ಹೇಳಿದೆ.
ದೋಷಿ ಸಂಜಯ್ ರಾಯ್ ಗೆ ಮರಣ ದಂಡನೆ ವಿಧಿಸಬೇಕು ಎಂದು ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ ಅವರು ನ್ಯಾ. ದೇಬಾಂಗ್ಶು ಬಸಕ್ ನೇತೃತ್ವದ ವಿಭಾಗೀಯ ನ್ಯಾಯಪೀಠದೆದುರು ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ಸ್ವೀಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.