ಕೇರಳದಲ್ಲಿ ವನ್ಯಜೀವಿ ದಾಳಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

Photo credit: PTI
ಹೊಸದಿಲ್ಲಿ: ಕೇರಳದಲ್ಲಿ ವನ್ಯಜೀವಿ ದಾಳಿ ಹಾಗೂ ಮರಳು ಗಣಿಗಾರಿಕೆಯಿಂದ ಕರಾವಳಿ ಪ್ರದೇಶದ ಜನರನ್ನು ರಕ್ಷಿಸಬೇಕೆಂದು ಆಗ್ರಹಿಸಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ನ ಸಂಸದರು ಇಂದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ವಯನಾಡಿನಲ್ಲಿ ಡಿಸೆಂಬರ್ 27ರ ನಂತರ ಕಾಡಾನೆ ಸೇರಿದಂತೆ ವನ್ಯಜೀವಿಗಳ ದಾಳಿಯಿಂದಾಗಿ 11 ಮಂದಿ ಮೃತಪಟ್ಟಿದ್ದು, ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.
“ತೀರ ಪ್ರದೇಶಗಳಲ್ಲಿ ಮರಳು ಗಣಿಗಾರಿಕೆ ನಡೆಸುತ್ತಿರುವುದರಿಂದ, ಮೀನುಗಾರರ ಸಮುದಾಯದ ಬದುಕಿಗೂ ಅಪಾಯ ಎದುರಾಗಿದೆ. ಪರಿಸರ ಮತ್ತು ಮೀನುಗಾರರ ಸಂರಕ್ಷಣೆಗಾಗಿ ಕೇಂದ್ರ ಸರಕಾರವು ಮರಳು ಗಣಿಗಾರಿಕೆ ಆದೇಶವನ್ನು ಹಿಂಪಡೆಯಬೇಕು” ಎಂದು ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಸಂಸದರು, ವನ್ಯಜೀವಿ ದಾಳಿ ಹಾಗೂ ಮರಳು ಗಣಿಗಾರಿಕೆಯಿಂದ ನಾಗರಿಕರನ್ನು ರಕ್ಷಿಸುವಂತೆ ಘೋಷಣೆಗಳನ್ನು ಕೂಗಿದರು.