ಜಾಫರ್ ಎಕ್ಸ್ಪ್ರೆಸ್ ರೈಲು ಅಪಹರಣದಲ್ಲಿ ಕೈವಾಡವಿದೆ ಎಂಬ ಪಾಕಿಸ್ತಾನದ ಆರೋಪವನ್ನು ನಿರಾಕರಿಸಿದ ಭಾರತ

Photo credit: PTI
ಹೊಸದಿಲ್ಲಿ : ಜಾಫರ್ ಎಕ್ಸ್ಪ್ರೆಸ್ ರೈಲು ಅಪಹರಣದಲ್ಲಿ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ವಿದೇಶಾಂಗ ಕಚೇರಿಯ ಆರೋಪವನ್ನು ಭಾರತ ಬಲವಾಗಿ ನಿರಾಕರಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಕುರಿತು ಪ್ರತಿಕ್ರಿಯಿಸಿ, ಪಾಕಿಸ್ತಾನದ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ. ಜಾಗತಿಕ ಭಯೋತ್ಪಾದನೆಯ ಕೇಂದ್ರ ಬಿಂದು ಎಲ್ಲಿದೆ ಎಂದು ಇಡೀ ಜಗತ್ತಿಗೆ ತಿಳಿದಿದೆ. ಪಾಕಿಸ್ತಾನವು ಬೆರಳು ತೋರಿಸಿ ತನ್ನ ಆಂತರಿಕ ಸಮಸ್ಯೆಗಳು ಮತ್ತು ವೈಫಲ್ಯಗಳ ಹೊಣೆಯನ್ನು ಇತರರ ಮೇಲೆ ಹೊರಿಸುವ ಬದಲು ಆಂತರಿಕವಾಗಿರುವ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದು ಒಳಿತು ಎಂದು ಹೇಳಿದರು.
ಜಾಫರ್ ಎಕ್ಸ್ಪ್ರೆಸ್ ದಾಳಿಯಲ್ಲಿ ಭಾಗಿಯಾಗಿರುವ ಪ್ರತ್ಯೇಕತಾವಾದಿಗಳಿಗೆ ಅಫ್ಘಾನಿಸ್ತಾನದ ನಾಯಕರೊಂದಿಗೆ ಸಂಪರ್ಕವಿದೆ. ಪಾಕಿಸ್ತಾನದಲ್ಲಿ ಭಯೋತ್ಪಾದನೆ ಹರಡುವುದರಲ್ಲಿ ಭಾರತದ ಪಾತ್ರವು ಇದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್ ಹೇಳಿದ್ದರು.
ಕ್ವೆಟ್ಟಾದಿಂದ ಪೆಶಾವರಕ್ಕೆ 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಪ್ರತ್ಯೇಕತಾವಾದಿಗಳು ಅಪಹರಿಸಿದ್ದರು. ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ ಮತ್ತು 33 ಪ್ರತ್ಯೇಕತಾವದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನದ ಭದ್ರತಾ ಪಡೆಗಳು ಹೇಳಿಕೊಂಡಿದೆ.