ಮುಸ್ಲಿಮರ ವಿರುದ್ಧ ಮಲತಾಯಿ ಧೋರಣೆ: ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಮಾಯಾವತಿ ಅಸಮಾಧಾನ
ಎಲ್ಲ ಧರ್ಮಗಳನ್ನೂ ಸಮಾನವಾಗಿ ನಡೆಸಿಕೊಳ್ಳಬೇಕು ಎಂದ ಬಿಎಸ್ಪಿ ಮುಖ್ಯಸ್ಥೆ

ಮಾಯಾವತಿ
ಲಕ್ನೊ: ಮುಸ್ಲಿಮರ ವಿರುದ್ಧ ಮಲತಾಯಿ ಧೋರಣೆ ಪ್ರದರ್ಶಿಸಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಲ್ಲ ಧರ್ಮಗಳನ್ನೂ ಸಮಾನವಾಗಿ ನಡೆಸಿಕೊಳ್ಳಬೇಕು ಎಂದು ಮಂಗಳವಾರ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ತಾರತಮ್ಯವು ಸಮಾಜದ ಶಾಂತಿ ಮತ್ತು ಸೌಹಾರ್ದಕ್ಕೆ ಮಾರಕವಾಗಲಿದ್ದು, ಇದು ಕಳವಳಕಾರಿ ಸಂಗತಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
“ಭಾರತವು ಎಲ್ಲ ಧರ್ಮಗಳನ್ನೂ ಗೌರವಿಸುವ ಜಾತ್ಯತೀತ ರಾಷ್ಟ್ರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಲ್ಲ ಧರ್ಮಗಳನ್ನೂ ಯಾವುದೇ ಪಕ್ಷಪಾತವಿಲ್ಲದೆ ಸಮಾನವಾಗಿ ನಡೆಸಿಕೊಳ್ಳಬೇಕು. ಆದರೆ, ಧಾರ್ಮಿಕ ವಿಚಾರಗಳಲ್ಲಿ ಮುಸ್ಲಿಮರ ವಿರುದ್ಧ ಪ್ರದರ್ಶಿಸಲಾಗುತ್ತಿರುವ ಮಲತಾಯಿ ಧೋರಣೆಯನ್ನು ಸಮರ್ಥಿಸಲಾಗದು” ಎಂದು ಅವರು ಟೀಕಿಸಿದ್ದಾರೆ.
“ಎಲ್ಲ ಧರ್ಮಗಳ ಹಬ್ಬಗಳ ಸಂದರ್ಭದಲ್ಲಿ ನಿಯಮಗಳು ಹಾಗೂ ಕಾನೂನುಗಳನ್ನು ಯಾವುದೇ ಪಕ್ಷಪಾತವಿಲ್ಲದೆ ಸಮಾನವಾಗಿ ಜಾರಿಗೊಳಿಸಬೇಕು. ಆದರೆ, ಹಾಗೆ ಆಗುತ್ತಿರುವಂತೆ ಕಾಣುತ್ತಿಲ್ಲ” ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
“ಇದರಿಂದ ಸಮಾಜದಲ್ಲಿ ಪರಸ್ಪರ ಶಾಂತಿ ಮತ್ತು ಸೌಹಾರ್ದತೆ ಕ್ಷೀಣಿಸುವುದು ಸಹಜವಾಗಿದ್ದು, ಇದು ನಿಜಕ್ಕೂ ಕಳವಳಕಾರಿಯಾಗಿದೆ. ಇದರತ್ತ ಸರಕಾರಗಳು ಗಮನ ಹರಿಸಬೇಕಿದೆ” ಎಂದು ಅವರು ಆಗ್ರಹಿಸಿದ್ದಾರೆ.