'ಆಶಾಕಿರಣ ಯೋಜನೆ'ಗೆ ಫೆ.18ರಂದು ಹಾವೇರಿಯಲ್ಲಿ ಸಿಎಂ ಚಾಲನೆ: ಸಚಿವ ಗುಂಡೂರಾವ್

Update: 2024-02-17 07:59 GMT

ಮಂಗಳೂರು, ಫೆ.17: ಎಲ್ಲ ವಯಸ್ಸಿನವರ ಕಣ್ಣಿನ ತಪಾಸಣೆ ಮಾಡಿ ದೃಷ್ಟಿ ದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಹಾಗೂ ಆವಶ್ಯಕತೆಯಿರುವವರಿಗೆ ಕಣ್ಣಿನಪೊರೆ ಶಸ್ತ್ರಚಿಕಿತ್ಸೆ ಮಾಡುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ 'ಆಶಾಕಿರಣ' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 18ರಂದು ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ತಿಳಿಸಿದರು.

ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಧತ್ವ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ 'ಆಶಾಕಿರಣ' ಯೋಜನೆಯು ಪ್ರಥಮವಾಗಿ 8 ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಮುಂದೆ ಹಂತ ಹಂತವಾಗಿ ರಾಜ್ಯದ ಉಳಿದ ಜಿಲ್ಲೆಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದರು.

ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ, ಚಾಮರಾಜನಗರ ಹಾಗೂ ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಶಾಕಿರಣ ಅಭಿಯಾನ ನಡೆಯಲಿದೆ ಎಂದು ಮಾಹಿತಿ ನೀಡಿದರು

'ಆಶಾ ಕಿರಣ' ಯೋಜನೆಯು ಕಣ್ಣಿನ ಆರೋಗ್ಯ ಸೇವೆಗಳ ಲಭ್ಯತೆಯ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಆರೋಗ್ಯ, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ-ಮನೆಗಳಿಗೆ ಭೇಟಿ ನೀಡಿ, ಎಲ್ಲ ವಯೋಮಾನದವರಿಗೆ ಪ್ರಾಥಮಿಕ ಹಂತದ ಕಣ್ಣಿನ ತಪಾಸಣೆ ನಡೆಸಲಿದ್ದಾರೆ ಎಂದರು.

ತಪಾಸಣೆ ವೇಳೆ ಕಣ್ಣಿನ ತೊಂದರೆ ಇದ್ದವರನ್ನು ದ್ವಿತೀಯ ಹಂತದ ತಪಾಸಣೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೇತ್ರ ವೈದ್ಯರು ಪರೀಕ್ಷಿಸಿ ಕನ್ನಡಕಗಳ ಆವಶ್ಯಕತೆ ಇರುವವರಿಗೆ ಅವರ ದೃಷ್ಟಿ ದೋಷದ ಪ್ರಕಾರ ಕನ್ನಡಕಗಳನ್ನು ಕಾರ್ಯಕ್ರಮದ ವತಿಯಿಂದ ತರಿಸಿ ಉಚಿತವಾಗಿ ವಿತರಿಸಲಿರುವರು ಎಂದು ಸಚಿವರು ವಿವರಿಸಿದರು.

ಕಣ್ಣಿನ ಪೊರೆ ಇರುವವರಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಅಥವಾ ನೋಂದಾಯಿತ ಸ್ವಯಂಸೇವಾ ಸಂಸ್ಥೆಗಳ ಆಸ್ಪತ್ರೆಗಳಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ.

ಮೊದಲ ಹಂತದ 4 ಜಿಲ್ಲೆಗಳಲ್ಲಿ ಒಟ್ಟು 56, 59, 036 ಜನರನ್ನು ಆಶಾ ಕಾರ್ಯಕರ್ತೆಯರ ಮೂಲಕ ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿದ್ದು, ಇವರಲ್ಲಿ 8,28, 884 ಜನರಿಗೆ ನೇತ್ರ ಸಂಬಂಧಿ ತೊಂದರೆಗಳು ಇರುವುದು ಕಂಡು ಬಂದಿದೆ. ಇವರನ್ನು ದ್ವಿತೀಯ ಹಂತದ ಚಿಕಿತ್ಸೆಗೆ ಒಳಪಡಿಸಿದಾಗ 2,45,588 ಮಂದಿಗೆ ದೃಷ್ಟಿ ದೋಷ ಕಂಡು ಬಂದಿದ್ದು, ಅವರಿಗೆ ಉಚಿತ ಕನ್ನಡಕಗಳನ್ನು ಒದಗಿಸಲಾಗುತ್ತದೆ. 39,336 ಜನರಿಗೆ ಕಣ್ಣಿನ ಪೊರೆ ತೊಂದರೆ ಕಂಡು ಬಂದಿದ್ದು, ಅವರಿಗೆ ಉಚಿತ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಗುಂಡೂರಾವ್ ತಿಳಿಸಿದರು.

ಎರಡನೇ ಹಂತದಲ್ಲಿ 4 ಜಿಲ್ಲೆಗಳಲ್ಲಿ ಒಟ್ಟು 52,77,235 ಜನರನ್ನು ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿದ್ದು ಇವರಲ್ಲಿ 9,43,398 ಜನರಲ್ಲಿ ನೇತ್ರ ಸಂಬಂಧಿ ತೊಂದರೆಗಳಿರುವುದು ಪತ್ತೆಯಾಗಿದೆ.ಇವರಿಗೆ ಕನ್ನಡಕ ವಿತರಣೆ, ಶಸ್ತ್ರ ಚಿಕಿತ್ಸೆ ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು.

ಮುಂದಿನ ಹಂತಗಳಲ್ಲಿ (2024-25) ರಾಮನಗರ, ಯಾದಗಿರಿ, ಕೊಡಗು, ಗದಗ ಹಾಗೂ 2025-26ರ ಸಾಲಿನಲ್ಲಿ ಚಿಕ್ಕಮಗಳೂರು, ಬೀದರ್, ಕೋಲಾರ, ಬಾಗಲಕೋಟೆ ಜಿಲ್ಲೆಗಳನ್ನು ಆಶಾ ಕಿರಣ ಯೋಜನೆಗಾಗಿ ಆಯ್ಕೆ ಮಾಡಲಾಗಿದೆ. ಹಂತ ಹಂತವಾಗಿ ರಾಜ್ಯದ ಉಳಿದ ಜಿಲ್ಲೆಗಳಿಗೆ ಇದನ್ನು ವಿಸ್ತರಿಸಲಾಗುವುದು.

6.5 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರ್ನಾಟಕವು ಕಣ್ಣಿನ ಆರೈಕೆಗೆ ಸಂಬಂಧಿಸಿದಂತೆ ಅತ್ಯುತ್ತಮ ಚಿಕಿತ್ಸಾ ವ್ಯವಸ್ಥೆಯನ್ನು ಹೊಂದಿದೆ. ಆಶಾಕಿರಣ ಕಾರ್ಯಕ್ರಮದಡಿ ಆಯೋಜಿಸಲಾಗುವ ಉಚಿತ ನೇತ್ರ ಚಿಕಿತ್ಸಾ ಶಿಬಿರಗಳು ಜನಸಾಮಾನ್ಯರಿಗೆ ವರದಾನವಾಗಲಿದೆ ಎಂದು ಸಚಿವರು ಅಭಿಪ್ರಾಯ ಪಟ್ಟರು.

ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಆನಂದ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News