ಖಾಸಗಿ ಆಂಗ್ಲಮಾಧ್ಯಮ ಶಾಲೆಗಳ ಮುಂದಿವೆ ಸವಾಲು: ಕೆ. ಸೀತಾರಾಮ ರೈ ಸವಣೂರು

Update: 2023-10-17 16:59 GMT

ಕೊಣಾಜೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳು ಬಹಳಷ್ಟು ಸವಾಲು ಎದುರಿಸುತ್ತಿದ್ದು ಆ ನಿಟ್ಟಿನಲ್ಲಿ ಆಡಳಿತ ಮಂಡಳಿ ಒಕ್ಕೂಟವನ್ನು ಬಲಿಷ್ಠಗೊಳಿಸುವ ಅನಿವಾರ್ಯತೆ ಇದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್ ಮೆನ್ ಕೆ. ಸೀತಾರಾಮ‌ ರೈ ಸವಣೂರು ಅಭಿಪ್ರಾಯಪಟ್ಟರು.

ಅವರು ಮಂಗಳೂರಿನ ಬಲ್ಮಠದಲ್ಲಿರುವ ಹೊಟೇಲ್ ಕ್ವಾಲಿಟಿಯ ಕುಡ್ಲ ಪೆವಿಲಿಯನ್ ನಲ್ಲಿ ಸೋಮವಾರ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿ, ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಹೆಸರು ಘೋಷಿಸಿದರು.

ಪ್ರಸ್ತುತ ದಿನಗಳಲ್ಲಿ ಜಾರಿಯಾಗುತ್ತಿರುವ ವಿವಿಧ ವ್ಯವಸ್ಥೆ, ಕಾನೂನುಗಳಿಂದಾಗಿ ಖಾಸಗಿ ಆಂಗ್ಲ‌ ಮಾಧ್ಯಮ ಶಾಲೆಗಳು ಬಹಳಷ್ಟು ಸಮಸ್ಯೆಗಳನ್ನು ಹೊಂದಿದ್ದರೂ ಅದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಒಕ್ಕೂಟ ಸ್ಪಂದಿಸುತ್ತಿದೆ. ಹಾಗೆಯೇ ಮುಂದಿನ ದಿನಗಳಲ್ಲೂ ನಾವೆಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕಿದ್ದು ಆ ಮೂಲಕ ಒಕ್ಕೂಟವನ್ನು ಬಲಿಷ್ಠಗೊಳಿಸುವ ಅನಿವಾರ್ಯತೆ ಎದುರಾಗಿದ್ದು ಎಲ್ಲ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಸಹಕರಿಸಬೇಕಿದೆ ಎಂದರು.

ಜೋಕಟ್ಟೆ ಅಂಜುಮಾನ್ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಯ ಸಲಹೆಗಾರ ಮೂಸಬ್ಬ ಪಿ . ಬ್ಯಾರಿ ಜೋಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸಾಂದೀಪನಿ ವಿದ್ಯಾಮಂದಿರದ ಸಂಚಾಲಕ ಎಚ್. ಭಾಸ್ಕರ ಆಚಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಭಯ ಜಿಲ್ಲಾ ಖಾಸಗಿ ಆಂಗ್ಲ‌ ಮಾಧ್ಯಮ ಶಾಲೆಗಳ ಸಂಚಾಲಕರು ಅಭಿಪ್ರಾಯ ವ್ಯಕ್ತಪಡಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಜಯಸೂರ್ಯ ರೈ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News