ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ‘ದೀಪಾವಳಿ’ ಸಂಭ್ರಮ

Update: 2023-11-12 14:45 GMT

ಮಂಗಳೂರು, ನ.12: ದೀಪಗಳ ಹಬ್ಬವಾದ ದೀಪಾವಳಿಯಲ್ಲಿ ಎರಡು ಬಗೆಯಲ್ಲಿ ಕಾಣಬಹುದಾಗಿದೆ. ತನ್ನನ್ನು ಉರಿಸಿ ಕೊಂಡು ಬೇರೆಯವರಿಗೆ ಬೆಳಕು ಕೊಡುವುದು ಒಂದು ಅರ್ಥವಾದರೆ, ಒಂದು ದೀಪದಿಂದ ನೂರು-ಸಾವಿರಾರು ದೀಪಗಳು ಬೆಳಗುತ್ತದೆ ಎಂಬುದು ಇನ್ನೊಂದು ಅರ್ಥ. ಬೆಳಕು ಜ್ಞಾನದ ಸಂಕೇತವೂ ಹೌದು. ಹಾಗಾಗಿ ಎಲ್ಲರೂ ಕೂಡಿಕೊಂಡು ಈ ಬೆಳಕಿನ ಹಬ್ಬ ಆಚರಿಸಿದಾಗ ಮಾತ್ರ ದೀಪಾವಳಿಯು ಅರ್ಥಪೂರ್ಣವಾಗಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು.

ಮಂಗಳೂರಿನ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ವತಿಯಿಂದ ವಾಮಂಜೂರು ಸಮೀಪದ ಮಂಗಳಜ್ಯೋತಿ ಜಂಕ್ಷನ್‌ನಲ್ಲಿ ರವಿವಾರ ನಡೆದ ದೀಪಾವಳಿ ಸಂಭ್ರಮ-2023’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರು ಪ್ರಗತಿಪರ ಅಧ್ಯಾಪಕರ ವೇದಿಕೆಯ ಅಧ್ಯಕ್ಷ ಡಾ. ವಸಂತ್ ಕುಮಾರ್ ಮಾತನಾಡಿ ಬೆಳಕು ಎಲ್ಲರಿಗೂ ಬೇಕು. ಹಾಗಾಗಿ ಬೆಳಕಿನ ಹಬ್ಬಕ್ಕೆ ಜಾತಿ-ಧರ್ಮವಿಲ್ಲ. ದಾರಿ ತಪ್ಪುತ್ತಿರುವ ಯುವಕರಿಗೆ ಉತ್ತಮ ಸಂಸ್ಕಾರ ನೀಡಿ ಉತ್ತಮ ಸಮಾಜ ನಿರ್ಮಿಸಬೇಕು. ಸಮಾಜ ಎಂಬ ಮೂರಕ್ಷರದಲ್ಲಿ ‘ಸಂಬಂಧಗಳು ಮಾನವನಲ್ಲಿ ಜನಿಸಬೇಕು ಎಂಬ ಅರ್ಥ ಅಡಗಿದೆ. ಅದೇ ಸಮಾಜ ಭಾವನೆ. ಸಂಸ್ಕಾರ ಎಂದರೆ ಬರೇ ಪ್ರಾರ್ಥನಾಲಯ ಕಟ್ಟುವುದು ಮತ್ತು ಮೂರ್ತಿ ಕೆತ್ತುವುದಲ್ಲ. ಎಲ್ಲರಿಗೂ ಸಮಾನ ಶಿಕ್ಷಣ ಮತ್ತು ಆರೋಗ್ಯ ನೀಡುವುದಾಗಿದೆ ಎಂದರು.

ಮಂಗಳೂರಿನ ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫಾ. ಸುದೀಪ್ ಪೌಲ್ ಮಾತನಾಡಿ, ಭಾರತದ ಇತಿಹಾಸವು ಸಾಂಸ್ಕೃತಿಕ ವೈವಿಧ್ಯದಿಂದ ಕೂಡಿವೆ. ಹಿಂದೆ ಎಲ್ಲರೂ ಪ್ರೀತಿ, ಸಾಮರಸ್ಯ, ಭಾವೈಕ್ಯದಿಂದ ಜೀವಿಸುತ್ತಿದ್ದರು. ಆದರೆ ಈಗ ಎಲ್ಲವೂ ಬದಲಾಗಿದೆ. ಆದಾಗ್ಯೂ ದೀಪಾವಳಿ ಧರ್ಮಗಳ ಗಡಿ ಮೀರಿ ಆಚರಿಸುವ ಹಬ್ಬವಾಗಲಿ ಎಂದರು.

ಸಂತ ಮದರ್ ತೆರೇಸಾ ವಿಚಾರ ವೇದಿಕೆ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿರು. ಕಾರ್ಪೊರೇಟರ್ ಅಬ್ದುಲ್ ಲತೀಫ್, ಮಂಗಳ ಜ್ಯೋತಿಯ ಕೊರಗಜ್ಜ ಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮಣ್ ವಾಮಂಜೂರು, ಮಂಗಳೂರು ಬೆಥನಿ ಸಿಸ್ಟರ್ ಪ್ರೊವಿನ್ಸಿಯಲ್ ಸುಪೀರಿಯರ್ ಸಿಸ್ಟರ್ ಸಿಸಿಲಿಯಾ ಮೆಂಡೋನ್ಸಾ, ಜಂಟಿ ಕಾರ್ಯದರ್ಶಿ ಮಂಜುಳಾ ನಾಯ್ಕ್, ಕೋಶಾಧಿಕಾರಿ ಡಾಲ್ಫಿ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

ಲತೀಕ್ಷಾ ಸ್ವಾಗತ ನೃತ್ಯ ಮಾಡಿದರು. ಪ್ರಶಾಂತ್ ಮತ್ತು ಬಳಗದವರು ಸೌಹಾರ್ದ ನೃತ್ಯ ಪ್ರದರ್ಶಿಸಿದರು. ಮನೋಜ್ ಕುಮಾರ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News