ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆ; ಗುಡುಗು, ಸಿಡಿಲಿನ ಆರ್ಭಟ

Update: 2023-10-16 14:36 GMT

ಮಂಗಳೂರು, ಅ.16: ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ನಿಮ್ನ ಒತ್ತಡದ ಪರಿಣಾಮ ಕರಾವಳಿಗೆ ತಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರ ಸಂಜೆ ಜಿಲ್ಲೆಯ ಬಹುತೇಕ ಕಡೆ ಉತ್ತಮ ಮಳೆಯಾಗಿದೆ.

ಮಂಗಳೂರು, ಬೆಳ್ತಂಗಡಿ, ಉಳ್ಳಾಲ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಗ್ಗೆಯೇ ತುಂತುರು ಮಳೆ ಕಾಣಿಸಿಕೊಂಡಿತ್ತು ಹಗಲಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿದೆ.

ವಾಮಂಜೂರು, ಸುರತ್ಕಲ್, ಪುತ್ತೂರು, ಬೆಳ್ತಂಗಡಿ, ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸಂಜೆಯಿಂದ ರಾತ್ರಿ ವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಕೆಲವಡೆ ಮಳೆಯೊಂದಿಗೆ ಗಾಳಿಯ ತೀವ್ರತೆ ಜೋರಾಗಿರುವುದು ಕಂಡು ಬಂದಿದೆ.

ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಅ.16ರಿಂದ 18ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಅ.17ರಂದು ಮಳೆ ಇನ್ನಷ್ಟು ಜೋರಾಗುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.

ನವ ಮಂಗಳೂರು ಬಂದರಿಗೆ ಆಗಮಿಸುವ ಹಡಗು, ಇನ್ನಿತರ ಎಲ್ಲ ರೀತಿಯ ಕಾರ್ಗೋ ಹಡಗುಗಳು ಸೂಕ್ತ ಮುಂಜಾಗ್ರತೆ ವಹಿಸಬೇಕು. ಮತ್ತು ಬಂದರಿನಲ್ಲಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಎನ್‌ಎಂಪಿಎ ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News