ಡಿಸಿ ಮನ್ನಾ ಸ್ಥಳಗಳ ಪಟ್ಟಿ ಒದಗಿಸುವಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2023-08-21 13:40 GMT

ಮಂಗಳೂರು, ಆ.21: ನಿವೇಶನ ಹಾಗೂ ಕೃಷಿಗಾಗಿ ಅರ್ಹರಿಗೆ ಡಿಸಿ ಮನ್ನಾ ಜಮೀನು ನೀಡಲು ಜಿಲ್ಲೆಯ ಬೆಳ್ತಂಗಡಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನು ಎಂದು ಘೋಷಿಸಲಾಗಿರುವ ಸ್ಥಳಗಳ ಪಟ್ಟಿಯನ್ನು ಒದಗಿಸುವಂತೆ ಸಂಬಂಧಿಸಿದ ತಾಲೂಕುಗಳ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಿಸಿ ಮನ್ನಾ ಜಮೀನಿಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಡಿಸಿ ಮನ್ನಾ ಜಮೀನುಗಳ ಮಾಹಿತಿಯಲ್ಲಿ ವ್ಯತ್ಯಾಸಗಳು ಕಂಡುಬಂದಿರುವುದರಿಂದ ಹಾಗೂ ಸಭೆಯಲ್ಲಿ ಸಮುದಾಯದ ಮುಖಂಡರು ಡಿಸಿ ಮನ್ನಾ ಜಮೀನು ಇನ್ನೂ ಹೆಚ್ಚು ಇದೆ ಎಂಬ ಅಂಶಗಳನ್ನು ವ್ಯಕ್ತಪಡಿಸಿರುವ ಹಿನ್ನಲೆ ಯಲ್ಲಿ ಒಟ್ಟಾರೆಯಾಗಿ ಅಡಂಗಲ್ ಒಳಗೊಂಡಂತೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಡಿಸಿ ಮನ್ನಾ ಜಮೀನು ಎಷ್ಟಿದೆ ಎಂಬುದನ್ನು ಒಂದೂವರೆ ತಿಂಗಳೊಳಗೆ ಪರಿಶೀಲಿಸಿ ವರದಿ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರಲ್ಲದೆ ವರದಿ ಬಂದ ನಂತರ ಅದನ್ನು ಪ್ರಕಟಿಸಿ, ಸಾರ್ವಜನಿಕರಿಂದಲೂ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು ಎಂದರು.

ಡಿಸಿ ಮನ್ನಾ ಜಮೀನನ್ನು ಯಾವ ರೀತಿ ವಿತರಣೆ ಮಾಡಬೇಕೆಂದು ಸರಕಾರಕ್ಕೆ ಈಗಾಗಲೇ ಸಲ್ಲಿಸಲಾಗಿರುವ ಕರಡು ಪ್ರತಿ ಹಾಗೂ ಅದರಿಂದ ಪ್ರಾಕ್ಟಿಕಲ್ ಆಗಿ ಎದುರಾಗಬಹುದಾದ ಸಮಸ್ಯೆಗಳು ಯಾವುವು ಎಂಬುದನ್ನು ಪರಿಶೀಲಿಸಲಾ ಗುವುದು. ನಂತರದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡದಂತೆ ಡಿಸಿ ಮನ್ನಾ ಜಮೀನನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರು 94-ಸಿ, 94-ಸಿಸಿಯಡಿ ಬರುವ ಅರ್ಜಿಗಳನ್ನು ಪರಿಶೀಲಿಸುವ ಸಂದರ್ಭ ಡಿಸಿ ಮನ್ನಾ ಜಮೀನಿಗೆ ಸಂಬಂಧಪಡುವ ಪ್ರಕರಣವೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

ದ.ಕ.ಜಿಪಂ ಸಿಇಒ ಡಾ. ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾ ರರು, ದ.ಕ. ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪ್ರಧಾನ ಸಂಚಾಲಕ ದೇವದಾಸ್, ಉಪ ಸಂಚಾಲಕ ರಮೇಶ್ ಕೋಟ್ಯಾನ್, ಅಶೋಕ್, ಸಂಚಾಲಕರಾದ ರಘು, ಚಂದ್ರು, ಶೇಖರ್, ಬಿ.ಕೆ. ವಸಂತ, ಆನಂದ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News