ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಉದ್ಘಾಟನೆ

Update: 2023-08-27 16:37 GMT

ಉಳ್ಳಾಲ: ಪತ್ರಕರ್ತರು ಸಾರ್ವಜನಿಕವಾಗಿ ಸಾಮಾಜಿಕ ಕಳಕಳಿಯ ಕೆಲಸಗಳನ್ನು ಮಾಡಿ ಜಿಲ್ಲಾಡಳಿತ ದ ಜೊತೆ ಸಹಕಾರ ನೀಡಬೇಕು. ಜಿಲ್ಲಾಡಳಿತ ಪತ್ರಕರ್ತರ ಕಾರ್ಯಕ್ರಮಗಳಿಗೆ ಸದಾ ಸಹಕಾರ ನೀಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ‌ ತಾಲೂಕು ಘಟಕ ಉದ್ಘಾಟಿಸಿ ಗ್ರಾಮ ಸಂಪರ್ಕ‌ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಸಾಕಷ್ಟು ಸವಾಲುಗಳಿದ್ದು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಮಾಧ್ಯಮ ರಂಗ ಜಿಲ್ಲಾಡಳಿತದ ಗಮನಕ್ಕೆ ತರುವ ಪ್ರಯತ್ನ ಮಾಡಬೇಕಾಗಿದೆ. ಗ್ರಾಮ ಸಂಪರ್ಕದ ಮೂಲಕ ಜವಾಬ್ದಾರಿ ಹಾಗೂ ಮಾದರಿಯುತ ಪ್ರಯತ್ನ. ಧ್ವನಿ ಇಲ್ಲದವರಿಗೆ ಧ್ವನಿಯಾಗುವ ಕಾರ್ಯದಲ್ಲಿ ಜಿಲ್ಲಾಡಳಿತದ ಸಹಕಾರ ಇರಲಿದೆ ಎಂದು ಹೇಳಿದರು.

ಸಂಸದ, ಬಿಜೆಪಿ‌ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪತ್ರಕತ್ರರ ಕ್ಷೇಮಾಭಿವೃದ್ಧಿ ನಿಧಿ ಸಂಚಯನಕ್ಕೆ ಚಾಲನೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಗಟ್ಟಿ ಸಮಾಜದ ಮೇಲ್ಡರು ಹರಿಶ್ಚಂದ್ರ ಗಟ್ಟಿ, ರಾಷ್ಟ್ರೀಯ ಸಮಿತಿ ಸದಸ್ಯ ಪಿ.ಬಿ. ಹರೀಶ್ ರೈ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕೊಲ್ಯ ಕುಲಾಲ ಸಮುದಾಯ ಭವನ ಕಟ್ಟಡ ಸಮಿತಿ ಅಧ್ಯಕ್ಷ ಅನಿಲ್ ದಾಸ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರ ತಂಡದಿಂದ ಕರೋಕೆ ಸಂಗಿತ ವೈಭವ, ನೃತ್ಯ ಕಾರ್ಯಕ್ರಮ ಪ್ರದರ್ಶನ ನಡೆಯಿತು. ಚೇತನ್ ಪಿಲಿಕುಲ ಸಾಂಸ್ಕೃತಿಕ ಕಾರ್ಯಕ್ರಮ‌ ನಿರೂಪಿಸಿದರು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶಶಿಧರ್ ಪೊಯ್ಯತ್ತಬೈಲ್ ಸ್ವಾಗತಿಸಿದರು. ಅಧ್ಯಕ್ಷ ವಸಂತ ಕೊಣಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಡಾ. ಸತೀಶ್ ಕೊಣಾಜೆ ವಂದಿಸಿದರು. ಉಪಾಧ್ಯಕ್ಷ ದಿನೇಶ್ ನಾಯಕ್ ತೊಕ್ಕೊಟ್ಟು ವಿದ್ಯಾನಿಧಿ ಪುರಸ್ಕೃತರ ಹೆಸರು ವಾಚಿಸಿದರು. ಪತ್ರಕರ್ತ ಸತೀಶ್ ಕುಮಾರ್ ಪುಂಡಿಕಾಯಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News