ಮಂಗಳೂರು ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು, ಆ.19: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಯ ವೇಳೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮುಡಿಪು ಸಮೀಪದ ರಫೀಕ್ (36)ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ಕೇರಳದ ತಲಶ್ಶೇರಿ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆರೋಪಿಯು ಬಳಿಕ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಆರೋಪಿಯನ್ನು ಬೆಂಗಳೂರಿನ ಹೊಸಕೋಟೆಯಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಹಿಂದೆ ಮುಲ್ಕಿ ಠಾಣಾ ವ್ಯಾಪ್ತಿ ಯಲ್ಲಿ ಕಳವು ಪ್ರಕರಣ, ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ ಪ್ರಕರಣ, ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ಪೊಕ್ಸೊ ಪ್ರಕರಣ, ಕದ್ರಿ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ ಪ್ರಕರಣ, ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅಪಹರಣ ಮತ್ತು ಕಳವು ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ, ತಲಶ್ಶೇರಿ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್ಎಂ, ಎಸ್ಸೈಗಳಾದ ಸುದೀಪ್ ಎಂವಿ, ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿ ವರ್ಗವು ಪಾಲ್ಗೊಂಡಿತ್ತು.