ಮಂಗಳೂರು: ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಅಶ್ಲೀಲ ಪದಗಳಿಂದ ನಿಂದನೆ; ಆರೋಪಿ ಅನಿಲ್‌ ಕುಮಾರ್ ಬಂಧನ

Update: 2024-01-16 16:41 GMT

ಅನಿಲ್‌ ಕುಮಾರ್

ಸುರತ್ಕಲ್, ಜ.16: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಅಶ್ಲೀಲ ಪದಗಳಿಂದ ನಿಂದಿಸಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವಕನೋರ್ವನನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅಜ್ಜರಣಿ ನಿವಾಸಿ, ಸುರತ್ಕಲ್‌ ಕಾನದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದುಕೊಂಡು ಟೂರಿಸ್ಟ್‌ ಕಾರು ಚಾಲಕನಾಗಿ ದುಡಿಯುತ್ತಿರುವ ಅನಿಲ್‌ ಕುಮಾರ್ (34) ಎಂದು ತಿಳಿದು ಬಂದಿದೆ.

ಆರೋಪಿ ಅನಿಲ್‌ ಕುಮಾರ್ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಎಂದು ತಿಳಿದು ಬಂದಿದೆ.

ಆರೋಪಿಯು ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯುವ ಸಲುವಾಗಿ ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಯತ್ನಿಸಿದ್ದ. ಆದರೆ, ಸರ್ವರ್ ಸಮಸ್ಯೆ ಮತ್ತು ಇತರ ಸಮಸ್ಯೆಗಳಿಂದ ಕಳೆದ 3 ತಿಂಗಳಿಂದ ಸೇರಿಸಲು ಸಾಧ್ಯವಾಗಲಿಲ್ಲ. ಇದರಿಂದ ಹತಾಶೆಗೊಂಡು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ‌.

ಆರೋಪಿ ಅನಿಲ್‌ ಕುಮಾರ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A, 505(i)(c), 504ರಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ‌.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News