ಅಂತರ್ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧೆ: ಕೆಎಂಸಿ ಮಣಿಪಾಲ ಕಾಲೇಜು ತಂಡಕ್ಕೆ ಪ್ರಶಸ್ತಿ
ಮಂಗಳೂರು, ಅ. 6: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವೈದ್ಯಕೀಯ ಶಾಸ್ತ್ರ ವಿಭಾಗದ ಪದವಿ ಪೂರ್ವ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ಶನಿವಾರ ನಡೆದ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧೆ ಮಣಿಪಾಲ ವೈದ್ಯಕೀಯ ಕಾಲೇಜನ್ನು ಪ್ರತಿನಿಧಿಸಿದ ರಾಘವ ಮತ್ತು ಅನಿರುದ್ದ ರಾವ್ ಜೋಡಿ ತಂಡವು ಪ್ರಥಮ ಸ್ಥಾನ ಗಳಿಸಿ ಪ್ರತಿಷ್ಠಿ ಕಿಮ್ಸ್ ಯು.ಜಿ.ಮೆಡಿಕ್ವಿಝ್ - 2024 ಪ್ರಶಸ್ತಿ ಬಾಚಿಕೊಂಡಿದೆ.
ಕೆ.ಎಂ.ಸಿ. ಮಣಿಪಾಲ ಕಾಲೇಜಿನ ಸಿದ್ಧಾರ್ಥನಂದ ಮತ್ತು ಆದರ್ಶ ಜೋಡಿ ತಂಡವು ದ್ವಿತೀಯ ಸ್ಥಾನ ಗಳಿಸಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಶಸ್ತಿ ವಿತರಿಸಿ ಮಾತನಾಡಿದ ಕಣಚೂರು ವೈದ್ಯಕೀಯ ಕಾಲೇಜಿನ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಅವರು ‘ವೈದ್ಯ ಶಿಕ್ಷಣ ವಿದ್ಯಾರ್ಥಿಗಳು ವಿವಿಧ, ನಿಯತಕಾಲಿಕ ಶೈಕ್ಷಣಿಕ ಸ್ಪರ್ಧಾಕೂಟದಲ್ಲಿ ಪಾಲ್ಗೊಂಡು ತಮ್ಮ ಜ್ಞಾನವನ್ನು ವೃದ್ಧಿಸಿದರೆ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಪ್ರಾಂಶುಪಾಲ ಡಾ. ಶಹನವಾಜ್ ಮಣಿಪ್ಪಾಡಿ, ಮುಖ್ಯ ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್, ಕಣಚೂರು ವೈದ್ಯಕೀಯ ಸಲಹಾ ಸಮಿತಿಯ ಅಧ್ಯಕ್ಷ ಡಾ. ಮುಹಮ್ಮದ್ ಇಸ್ಮಾಯೀಲ್ ಮತ್ತು ಸದಸ್ಯರಾದ ಡಾ. ಎಂ.ವಿ. ಪ್ರಭು ಉಪಸ್ಥಿತರಿದ್ದರು.
ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದೇವದಾಸ್ ರೈ ಸ್ಪರ್ಧಾಕೂಟವನ್ನು ನಿರೂಪಿಸಿದರು. ಅವಿಭಜಿತ ದ.ಕ. ಜಿಲ್ಲೆಯ ವಿವಿಧ ವೈದ್ಯಕೀಯ ಶಿಕ್ಷಣ ಕಾಲೇಜಿನ 60 ತಂಡಗಳು ನಿರ್ಣಾಯಕ ಮತ್ತು ಅಂತಿಮ ಸುತ್ತಿಗೆ ಪ್ರವೇಶ ಪಡೆದಿ ದ್ದವು. ಎಂ.ವಿ. ಮಲ್ಯ ಬಹುಮಾನಗಳನ್ನು ಪ್ರಾಯೋಜಿಸಿದ್ದರು. ಡಾ. ದೇವದಾಸ್ ರೈ ಸ್ವಾಗತಿಸಿದರು. ಡಾ. ಸನಿನ್ ವಂದಿಸಿದರು. ಡಾ. ಪ್ರೀತಮ್ ಈ ಸ್ಪರ್ಧಾ ಕೂಟವನ್ನು ಸಂಘಟಿಸಿದ್ದರು.