ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ- ಕೊಲೆ ಪ್ರಕರಣ| ಐಎಂಎ ದ.ಕ. ಜಿಲ್ಲಾ ಘಟಕದಿಂದ ಮೆರವಣಿಗೆ- ಪ್ರತಿಭಟನೆ

Update: 2024-08-17 13:31 GMT

ಮಂಗಳೂರು, ಆ. 17: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯೆಯ ರೇಪ್ ಮತ್ತು ಕೊಲೆ ಪ್ರಕರಣ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್(ಐಎಂಎ) ದ.ಕ. ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳ ವೈದ್ಯರು ಹಾಗೂ ಸಿಬ್ಬಂದಿ ಹೊರರೋಗಿ ವಿಭಾಗ ಬಂದ್ ಮಾಡಿ 24 ಗಂಟೆಗಳ ಪ್ರತಿಭಟನೆ ನಡೆಸಿದರು.

ಮಂಗಳೂರಿನಲ್ಲಿ ಐಎಂಎ ವತಿಯಿಂದ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಮೆರವಣಿಗೆಯಲ್ಲಿ ಐಎಂಎ ಪದಾಧಿಕಾರಿ ಗಳು, ದಂತವೈದ್ಯಕೀಯ, ಆಯುಷ್, ರೆಡ್‌ಕ್ರಾಸ್ ಸೇರಿದಂತೆ ವಿವಿಧ ವೈದ್ಯಕೀಯ ಸಂಘಟನೆಗಳು, ನರ್ಸಿಂಗ್ ವೈದ್ಯಕೀಯ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ, ನ್ಯಾಯಕ್ಕಾಗಿ ಆಗ್ರಹದ ಫಲಕ ಹಿಡಿದುಕೊಂಡು ಪಾಲ್ಗೊಂಡಿದ್ದರು.

ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್. ಡಾ.ಭರತ್ ಶೆಟ್ಟಿ ಬೆಂಬಲ ಸೂಚಿಸಿ ಮೆರವಣಿಗೆಯ ಮುಂಚೂಣಿಯಲ್ಲಿ ಭಾಗವಹಿಸಿದ್ದರು. ನಗರದ ಐಎಂಎ ಹೌಸ್‌ನಿಂದ ಬೃಹತ್ ಮೌನ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಗೇಟಿನ ಬಳಿ ಕೊನೆಗೊಂಡಿತು. ಡಿಸಿ ಕಚೇರಿವರೆಗೆ ತೆರಳಲು ಮುಂದಾದರೂ ಪೊಲೀಸರು ಅನುಮತಿ ನೀಡಲಿಲ್ಲ. ಬಳಿಕ ಪ್ರತಿಭಟನಾಕಾರರ ಬಳಿಗೆ ಆಗಮಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮನವಿ ಸ್ವೀಕರಿಸಿ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುವುದಾಗಿ ಹೇಳಿದರು.

ದಾರುಣವಾಗಿ ಅತ್ಯಾಚಾರಗೊಂಡು ಕೊಲೆಗೀಡಾದ ಕೋಲ್ಕತ್ತಾದ ವೈದ್ಯೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಘಟನೆಯ ತನಿಖೆಯನ್ನು ಸಿಬಿಐ ವಹಿಸಿ ಅಪರಾಧಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಐಎಂಎ ಅಧ್ಯಕ್ಷ ಡಾ.ಅಶೋಕನ್, ನಿಯೋಜಿತ ಅಧ್ಯಕ್ಷೆ ಡಾ.ಜೆನ್ಸಿ ಮರಿಯಾ ಡಿಸೋಜಾ, ಡಾ.ರಂಜನ್ ಮತ್ತಿತರರಿದ್ದರು.

ಐಎಂಎ ಸಂಘಟಿಸಿದ ವೈದ್ಯರ ಬೃಹತ್ ಪ್ರತಿಭಟನೆ ಡಿಸಿ ಕಚೇರಿ ಗೇಟಿನ ಬಳಿ ಆಗಮಿಸಿದಾಗ ಡಿಸಿ ಕಚೇರಿ ಆವರಣದ ಒಳಗೆ ತೆರಳಲು ಪೊಲೀಸರು ತಡೆದರು. ಈ ಬಗ್ಗೆ ಸಂಸದರು, ಶಾಸಕರು ಹಾಗೂ ಐಎಂಎ ಪದಾಧಿಕಾರಿಗಳು ಪ್ರಶ್ನಿಸಿದಾಗ, ನಿಷೇಧಾಜ್ಞೆ ಇರುವುದರಿಂದ ಮೆರವಣಿಗೆ ಒಳಗೆ ಪ್ರವೇಶಿಸುವಂತಿಲ್ಲ. ಮನವಿ ನೀಡಲು ಐದಾರು ಮಂದಿ ತೆರಳಬಹುದು ಎಂದರು.

ಪೊಲೀಸರು ತಡೆದ ವಿಚಾರಕ್ಕೆ ಸಂಬಂಧಿಸಿ ಸಂಸದ, ಶಾಸಕರು ಸೇರಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಪ್ರತಿಭಟನೆ ಬಗ್ಗೆ ಸರಿಯಾದ ವಿವರ ನೀಡದ ಕಾರಣ ಅನುಮತಿ ನೀಡಲಾಗುವುದಿಲ್ಲ ಎಂದು ಡಿಸಿಪಿ ಸಿದ್ಧಾರ್ಥ ಗೋಯಲ್ ತಿಳಿಸಿದರು. ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿಗಳನ್ನೇ ಸ್ಥಳಕ್ಕೆ ಕರೆಸಲಾಯಿತು.

ತುರ್ತು ಚಿಕಿತ್ಸೆ ಹೊರತುಪಡಿಸಿ ಹೊರ ರೋಗಿ ವಿಭಾಗದ ಸೇವೆಯನ್ನು ಸ್ಥಗಿತಗೊಳಿಸಿ ವೈದ್ಯರು ಹಾಗೂ ಇತರ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಪ್ರತಿಭಟನೆಯ ಅರಿವಿಲ್ಲದೆ ಚಿಕಿತ್ಸೆಗೆ ಆಗಮಿಸಿದ ಹೊರ ರೋಗಿಗಳನೇಕರು ವಾಪಾಸು ತೆರಳಬೇಕಾಯಿತು.

‘ಕೊಲ್ಕತ್ತಾದಲ್ಲಿ ನಡೆದಿರುವ ಘಟನೆಯ ಅತ್ಯಂತ ಹೀನಾಯವಾಗಿದೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಮಾತ್ರವಲ್ಲದೆ, ಪಾರದರ್ಶಕ ತನಿಖೆ ಆಗಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆದಷ್ಟು ಶೀಘ್ರ ವಿಧಿಸುವಂತಾಗಬೇಕು ಹಾಗೂ ನ್ಯಾಯ ದೊರಕಿಸಬೇಕು. ನಾವು ಆಸ್ಪತ್ರೆಗಳಲ್ಲಿ ಸಮಾಜದ ಸೇವೆಗಾಗಿ ದುಡಿಯುವವರು. ಆಸ್ಪತ್ರೆಗಳಲ್ಲಿ ದುಡಿಯುವ ಎಲ್ಲರಿಗೂ ರಕ್ಷಣೆಯ ಜತೆಗೆ ಉದ್ಯೋಗ ಸ್ಥಳಗಳಲ್ಲಿ ಎಲ್ಲಾ ಮಹಿಳೆಯರಿಗೆ ಸೂಕ್ತ ಭದ್ರತೆ ನೀಡಬೇಕು.’

ಡಾ.ಜೆನ್ಸಿ ಮರಿಯಾ ಡಿಸೋಜಾ, ನಿಯೋಜಿತ ಅಧ್ಯಕ್ಷೆ, ಐಎಂಎ ದ.ಕ. ಜಿಲ್ಲಾ ಘಟಕ.






 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News