ಉತ್ತರ ಪ್ರದೇಶ: ಪ್ರೇಮ ಪ್ರಕರಣ, ದಲಿತ ಯುವಕನ ಥಳಿಸಿ ಹತ್ಯೆ

Update: 2024-01-08 17:39 GMT

ಲಕ್ನೊ: ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ 21 ವರ್ಷದ ದಲಿತ ಯುವಕನನ್ನು ಕೆಲವರು ಮನೆಯೊಂದರಲ್ಲಿ ಕೂಡಿ ಹಾಕಿ, ಬಳಿಕ ಥಳಿಸಿ ಹತ್ಯೆಗೈದ ಘಟನೆ ಜಿಲ್ಲೆಯ ಖಾತೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಈ ಘಟನೆ ಜಸೋಲಾ ಗ್ರಾಮದಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಅಂಕಿತ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದರು ಹಾಗೂ ಗಂಭೀರ ಗಾಯಗೊಂಡಿದ್ದ ಅಂಕಿತ್ನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು ಎಂದು ಖತೌಲಿ ಸರ್ಕಲ್ ಅಧಿಕಾರಿ ರವಿಶಂಕರ್ ತಿಳಿಸಿದ್ದಾರೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಪರಿಚಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಅಂಕಿತ್ ಅವರ ಕುಟುಂಬ, ಯುವತಿಯೋರ್ವಳನ್ನು ಪ್ರೇಮಿಸುತ್ತಿರುವ ಕಾರಣದಿಂದ ಆತನನ್ನು ರವಿವಾರದಿಂದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು ಎಂದು ಆರೋಪಿಸಿದ್ದಾರೆ ಎಂದು ರವಿ ಶಂಕರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News