ಮೈಸೂರು, ಧಾರವಾಡ ವಿವಿಗಳಿಗೆ ಹಣಕಾಸು ನೆರವು ನೀಡಲು ಕೇಂದ್ರಕ್ಕೆ ದೇವೇಗೌಡ ಮನವಿ

Update: 2025-03-11 21:37 IST
ಮೈಸೂರು, ಧಾರವಾಡ ವಿವಿಗಳಿಗೆ ಹಣಕಾಸು ನೆರವು ನೀಡಲು ಕೇಂದ್ರಕ್ಕೆ ದೇವೇಗೌಡ ಮನವಿ

ಎಚ್.ಡಿ.ದೇವೇಗೌಡ

  • whatsapp icon

ಹೊಸದಿಲ್ಲಿ : ಕರ್ನಾಟಕ ರಾಜ್ಯದ ಪ್ರತಿಷ್ಠಿತ ವಿವಿಗಳಾದ ಮೈಸೂರು ಮತ್ತು ಧಾರವಾಡ ವಿವಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಮತ್ತು ಧಾರವಾಡ ವಿವಿ ಶಿಕ್ಷಣ ಕ್ಷೇತ್ರಕ್ಕೆ ಭಾರೀ ಕೊಡುಗೆ ನೀಡಿವೆ. ಆದರೆ, ತೀವ್ರವಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ. ಇದರಿಂದಾಗಿ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ವೇತನ ಪಾವತಿಸಲು ವಿವಿಗಳು ಹೆಣಗಾಡುತ್ತಿವೆ. ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಹಾಯಕ್ಕೆ ಬರಬೇಕು ಎಂದು ಕೋರಿದರು.

ಶಿಕ್ಷಣವು ಮಹತ್ವದ ವಿಷಯವಾಗಿದ್ದು, ಕೇಂದ್ರ ಮತ್ತು ರಾಜ್ಯಗಳೆರಡೂ ಶಿಕ್ಷಣ ಸಂಸ್ಥೆಗಳು ಆರ್ಥಿಕ ಕೊರತೆಯಿಂದ ಬಳಲದಂತೆ ನೋಡಿಕೊಳ್ಳಬೇಕು. 1916ರಲ್ಲಿ ಇಡೀ ಭಾರತದ ಆರನೇ ವಿವಿಯಾಗಿ ಸ್ಥಾಪನೆಯಾದ ಮೈಸೂರು ವಿವಿಯ ಐತಿಹಾಸಿಕ ಮಹತ್ವವನ್ನು ಹೇಳಿದ ದೇವೇಗೌಡ, ಉನ್ನತ ಶಿಕ್ಷಣವನ್ನು ನೀಡುವಲ್ಲಿ ವಿವಿಯು ನಿರ್ಣಾಯಕ ಪಾತ್ರ ವಹಿಸಿದೆ ಎಂದರು.

ಅಲ್ಲದೆ, ಭಾರತೀಯ ವಿಜ್ಞಾನ ಕಾಂಗ್ರೆಸ್‍ ನಂತಹ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೈಸೂರು ವಿವಿ ವಿವಿಧ ವಿಭಾಗಗಳಲ್ಲಿ ಸಂಶೋಧನೆ ಮತ್ತು ಬೋಧನೆಗೆ ಗಣನೀಯ ಕೊಡುಗೆ ನೀಡಿದೆ. ಆದಾಗ್ಯೂ, ಅದರ ಪ್ರತಿಷ್ಠಿತ ಸ್ಥಾನಮಾನದ ಹೊರತಾಗಿಯೂ, ವಿವಿ ಈಗ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ, ಅಧ್ಯಾಪಕರನ್ನು ಉಳಿಸಿಕೊಳ್ಳಲು ಮತ್ತು ಸಂಬಳವನ್ನು ಪಾವತಿಸಲು ಹೆಣಗಾಡುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಅದೇ ರೀತಿ, ಉತ್ತರ ಕರ್ನಾಟಕದ ಭಾಗದಲ್ಲಿ ಅಗಾಧ ಪ್ರಮಾಣದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿರುವ ಧಾರವಾಡ ವಿವಿಯೂ ಆರ್ಥಿಕ ಸಂಕಷ್ಟದಲ್ಲಿದೆ. ಮಂಜೂರಾಗಿರುವ ಬೋಧಕ ಹುದ್ದೆಗಳು ಖಾಲಿ ಉಳಿದಿವೆ ಮತ್ತು ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಬೋಧಕರಿಗೆ ಸಮಯಕ್ಕೆ ಸರಿಯಾಗಿ ಸಂಬಳ ಸಿಕ್ಕಿಲ್ಲ. ಈ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ರಾಜ್ಯ ಸರಕಾರಕ್ಕೆ ಸಂಪನ್ಮೂಲಗಳಿಲ್ಲ. ಈ ವಿಷಯದಲ್ಲಿ ಕೇಂದ್ರವು ಮಧ್ಯಪ್ರವೇಶಿಸಬೇಕೆಂದು ಅವರು ಒತ್ತಾಯಿಸಿದರು.

ಶಿಕ್ಷಕನಾಗಿ ನನ್ನ ಸ್ವಂತ ಅನುಭವದಿಂದ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಸ್ಥಿತಿಗತಿಗಳನ್ನು, ಶಿಕ್ಷಕರ ಸಮಸ್ಯೆಗಳನ್ನು ಅರಿತಿದ್ದೇನೆ. ಕರ್ನಾಟಕದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ನಾನು ಸಿಎಂ ಆಗಿದ್ದಾಗ ಒಮ್ಮೆಲೇ 1.56 ಲಕ್ಷ ಮಹಿಳಾ ಶಿಕ್ಷಕರನ್ನು ನೇಮಿಸಿದೆ. ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಭವ್ಯ ಭವಿಷ್ಯವು ಇಂತಹ ವಿವಿಗಳ ಮೇಲೆ ಅವಲಂಬಿತವಾಗಿದೆ. ಶಿಕ್ಷಕರಿಗೆ ವೇತನ ಸಿಗುವಂತೆ ಮತ್ತು ವಿವಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ತಕ್ಷಣದ ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News