ಜಮ್ಮು- ಕಾಶ್ಮೀರದ ರಾಜ್ಯ ಸ್ಥಾನಮಾನ ಕಿತ್ತುಕೊಂಡವರಿಗೆ ತಕ್ಕ ಪಾಠ ಕಲಿಸಬೇಕು : ಮತದಾರರಿಗೆ ಖರ್ಗೆ ಆಗ್ರಹ

Update: 2024-10-01 06:21 GMT

Photo : PTI

ಹೊಸದಿಲ್ಲಿ : ʼಜಮ್ಮು- ಕಾಶ್ಮೀರ ಚುನಾವಣೆಯ 3ನೇ ಹಂತದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನ ಕಿತ್ತುಕೊಂಡವರಿಗೆ ತಕ್ಕ ಪಾಠ ಕಲಿಸಬೇಕುʼ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕೊನೆಯ ಮತ್ತು ಮೂರನೇ ಹಂತದ ಮತದಾನದ ಹಿನ್ನೆಲೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ 3ನೇ ಹಂತದ 40 ಕ್ಷೇತ್ರಗಳಲ್ಲಿ ಜನರು ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಲಾಯಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದ ಜನರಿಂದ ರಾಜ್ಯ ಸ್ಥಾನಮಾನ ಕಿತ್ತುಕೊಂಡವರಿಗೆ ಪಾಠ ಕಲಿಸಲು ಇದು ಅಂತಿಮ ಅವಕಾಶವಾಗಿದೆ. ನಿಮ್ಮ ಒಂದೇ ಒಂದು ಮತವು ನಿಮ್ಮ ಭವಿಷ್ಯವನ್ನು ಬದಲಾಯಿಸಬಹುದು ಮತ್ತು ಉಜ್ವಲ ಭವಿಷ್ಯಕ್ಕೆ ನಾಂದಿಯಾಗಬಹುದು ಎಂಬುದನ್ನು ನೆನಪಿಡಿ, ಅದು ನಿಮ್ಮ ಸಾಂವಿಧಾನಿಕ ಹಕ್ಕುಗಳನ್ನು ಭದ್ರಪಡಿಸುತ್ತದೆ ಎಂದು ಹೇಳಿದ್ದಾರೆ.

ಯುವಜನರಿಗೆ ಉತ್ತಮ ಉದ್ಯೋಗಾವಕಾಶಕ್ಕಾಗಿ, ಭ್ರಷ್ಟರನ್ನು ಕೆಳಗಿಸಲು, ಭೂ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರಗತಿ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ನಿಮ್ಮ ಒಂದೇ ಒಂದು ಮತವು ಮೌಲ್ಯಯುತವಾಗಿದೆ. ನಾವು ಮೊದಲ ಬಾರಿಗೆ ಮತಚಲಾಯಿಸುವ ಮತದಾರರನ್ನು ಸ್ವಾಗತಿಸುತ್ತೇವೆ, ಜಮ್ಮು ಮತ್ತು ಕಾಶ್ಮೀರದ ಭವಿಷ್ಯ ಅವರ ಭಾಗವಹಿಸುವಿಕೆಯಿಂದ ನಿರ್ಧರಿಸಲ್ಪಡುತ್ತದೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ 3ನೇ ಹಂತದಲ್ಲಿ 39.18 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದು, 415 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News