ಸಂದೇಶಖಾಲಿ ಹಿಂಸಾಚಾರ | ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಷ್ಟ್ರಪತಿಗೆ ಎನ್‌ಸಿಡಬ್ಲ್ಯು ಅಧ್ಯಕ್ಷೆ ಶಿಫಾರಸು

Update: 2024-03-05 17:20 GMT

ರೇಖಾ ಶರ್ಮಾ | Photo: X \ @NCWIndia

ಹೊಸದಿಲ್ಲಿ : ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಅವರು ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ ಹಾಗೂ ಸಂದೇಶಖಾಲಿ ಹಿಂಸಾಚಾರದ ಕುರಿತಂತೆ ಪಶ್ಚಿಮಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದಾರೆ.

ಈ ಹಿಂದೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ (ಎನ್‌ಸಿಎಸ್‌ಸಿ) ಕೂಡ ಟಿಎಂಸಿ ಆಡಳಿತ ಇರುವ ಪಶ್ಚಿಮಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಶಿಫಾರಸು ಮಾಡಿತ್ತು.

ರಾಷ್ಟ್ರಪತಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ಪಶ್ಚಿಮಬಂಗಾಳದ ಸಂದೇಶಖಾಲಿಯ ಗಂಭೀರ ಪರಿಸ್ಥಿತಿ ಇಂದು ಕೂಡ ಮುಂದುವರಿದಿದೆ ಎಂದಿದ್ದಾರೆ.

‘‘ಸಂದೇಶಖಾಲಿ ಒಂದೇ ಘಟನೆಯಲ್ಲ. ಇದಕ್ಕಿಂತ ಹಿಂದೆ ರಾಜ್ಯದಲ್ಲಿ ಹಲವು ಹಿಂಸಾಚಾರದ ಘಟನೆಗಳು ವರದಿಯಾಗಿವೆ. ಆದರೆ, ರಾಜ್ಯ ಸರಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆದುದರಿಂದ ಪಶ್ಚಿಮಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಶಿಫಾರಸು ಮಾಡುತ್ತದೆ’’ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಪರಿಸ್ಥಿತಿಯ ಬಗ್ಗೆ ತನಗೆ ಅರಿವಿದೆ. ಅದನ್ನು ನಿಕಟವಾಗಿ ಗಮನಿಸುತ್ತಿದ್ದೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತನಗೆ ತಿಳಿಸಿದ್ದಾರೆ ಎಂದು ಶರ್ಮಾ ಅವರು ಹೇಳಿದ್ದಾರೆ.

ಟಿಎಂಸಿ ನಾಯಕ ಶಹಜಹಾನ್ ಶೇಖ್ ತಮ್ಮ ಭೂಮಿಯನ್ನು ಅತಿಕ್ರಮಿಸಿದ್ದಾರೆ. ಅಲ್ಲದೆ, ತಮಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಂದೇಶಖಾಲಿಯ ದೊಡ್ಡ ಸಂಖ್ಯೆಯ ಮಹಿಳೆಯರು ಆರೋಪಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News