ಪಶ್ಚಿಮ ಬಂಗಾಳ | ಸಂದೇಶಖಾಲಿ ಹಿಂಸಾಚಾರ ಪ್ರಕರಣ; ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್

Update: 2024-02-16 14:59 GMT

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಸಂದೇಶಖಾಲಿ ಗ್ರಾಮದಲ್ಲಿ ನಡೆದ ಹಿಂಸಾಚಾರದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ವಿಶೇಷ ತನಿಖಾ ತಂಡ (ಸಿಟ್)ದಿಂದ ತನಿಖೆಯನ್ನು ಕೋರಿ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ.

ವಕೀಲ ಅಲಖ್ ಅಲೋಕ ಶ್ರೀವಾಸ್ತವ ಸಲ್ಲಿಸಿರುವ ಅರ್ಜಿಯಲ್ಲಿ ಹಿಂಸಾಚಾರದ ಸಂತ್ರಸ್ತರಿಗೆ ಪರಿಹಾರ ಮತ್ತು ಕರ್ತವ್ಯ ಚ್ಯುತಿಗಾಗಿ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೂ ಕೋರಲಾಗಿದೆ.

ಪ್ರಕರಣದ ತನಿಖೆ ಮತ್ತು ನಂತರದ ವಿಚಾರಣೆಯನ್ನು ಪ.ಬಂಗಾಳದಿಂದ ಹೊರಗೆ ವರ್ಗಾಯಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ಮಣಿಪುರ ಹಿಂಸಾಚಾರ ಪ್ರಕರಣದಂತೆ ಮೂವರು ನ್ಯಾಯಾಧೀಶರ ಸಮಿತಿಯಿಂದ ವಿಚಾರಣೆ ನಡೆಸುವಂತೆಯೂ ಅರ್ಜಿದಾರರು ಕೋರಿದ್ದಾರೆ. ಉತ್ತರ 24 ಪರಗಣಗಳ ಜಿಲ್ಲೆಯ ಸಂದೇಶಖಾಲಿ ಗ್ರಾಮದಲ್ಲಿ ಸ್ಥಳೀಯ ಟಿಎಂಸಿ ನಾಯಕನಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.

ಪ್ರದೇಶದಲ್ಲಿಯ ಹಲವಾರು ಮಹಿಳೆಯರು ಟಿಎಂಸಿ ನಾಯಕ ಶಹಜಹಾನ್ ಶೇಖ್ ಮತ್ತು ಆತನ ಬೆಂಬಲಿಗರ ವಿರುದ್ಧ ಭೂ ಕಬಳಿಕೆ ಮತ್ತು ತಮ್ಮ ಮೇಲೆ ಲೈಂಗಿಕ ದೌರ್ಜನ್ಯಗಳ ಆರೋಪಗಳನ್ನು ಹೊರಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಖ್ ನಿವಾಸದಲ್ಲಿ ಶೋಧ ಕಾರ್ಯಾಚರಣೆಗೆ ತೆರಳಿದ್ದ ಜಾರಿ ನಿರ್ದೇಶನಾಲಯ (ಈಡಿ)ದ ಅಧಿಕಾರಿಗಳ ಮೇಲೆ ಆತನ ಬೆಂಬಲಿಗರ ಗುಂಪು ದಾಳಿ ನಡೆಸಿತ್ತು. ಆ ಬಳಿಕ ಶೇಖ್ ತಲೆಮರೆಸಿಕೊಂಡಿದ್ದಾನೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News