ಮಧ್ಯಪ್ರದೇಶ | ಹನುಮ ಜಯಂತಿ ಮೆರವಣಿಗೆ ವೇಳೆ ಘರ್ಷಣೆ

Photo credit: ANI
ಭೋಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಸಿನ್ಹಾ ಈ ಕುರಿತು ಪ್ರತಿಕ್ರಿಯಿಸಿ, ʼಗುನಾ ಜಿಲ್ಲೆಯಲ್ಲಿ ಮಸೀದಿಯೊಂದರ ಬಳಿ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಎರಡು ಸಮುದಾಯಗಳ ಸದಸ್ಯರು ಘೋಷಣೆ ಕೂಗಿದ್ದಾರೆ. ಬಳಿಕ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಸಧ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. 15 ರಿಂದ 20 ನಿಮಿಷಗಳಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ವೀಡಿಯೊ ದೃಶ್ಯಾವಳಿಗಳ ಆಧಾರದ ಮೇಲೆ ದುಷ್ಕರ್ಮಿಗಳನ್ನು ಗುರುತಿಸಲಾಗಿದೆ. ವದಂತಿಗಳಿಗೆ ಗಮನ ಕೊಡಬೇಡಿ ಎಂದು ನಾವು ಜನರಲ್ಲಿ ಮನವಿ ಮಾಡುತ್ತೇವೆʼ ಎಂದು ಹೇಳಿದರು.
ಗುನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಿಶೋರ್ ಕುಮಾರ್ ಕನ್ಯಾಲ್ ಪ್ರತಿಕ್ರಿಯಿಸಿ, ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲಾಗಿದೆ ಎಂದು ದೃಢಪಡಿಸಿದರು.