ಮಂಗಳೂರು: ಆರ್‌ಟಿಐ ಕಾರ್ಯಕರ್ತನ ಕಗ್ಗೊಲೆ

Update: 2016-03-21 14:16 GMT

ಮಂಗಳೂರು, ಮಾ. 21: ಆರ್‌ಟಿಐ ಕಾರ್ಯಕರ್ತರೊಬ್ಬರನ್ನು ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಇಂದು ಬೆಳಗ್ಗಿನ ಜಾವ ಕೊಡಿಯಾಲ್‌ಬೈಲ್‌ನ ಪಿವಿಎಸ್ ಬಳಿ ನಡೆದಿದೆ.
ಕೊಲೆಗೀಡಾದವರನ್ನು ಕೊಡಿಯಾಲ್‌ಬೈಲ್ ಬಳಿಯ ನಿವಾಸಿ ವಿನಾಯಕ ಪಾಂಡುರಂಗ ಬಾಳಿಗಾ (51) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಸುಮಾರು 5:30 ಗಂಟೆಗೆ ತಮ್ಮ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನಕ್ಕೆ ಪೂಜೆಗೆಂದು ತೆರಳುತ್ತಿದ್ದರು. ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಬಾಳಿಗಾರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ತಲೆ ಮತ್ತು ಬೆನ್ನಿನ ಭಾಗಕ್ಕೆ ತೀವ್ರ ತರದ ಏಟು ತಗಲಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಾಯಿಸಿದ್ದರೂ ಮಾರ್ಗ ಮಧ್ಯೆ ಮೃತಪಟ್ಟರೆಂದು ಹೇಳಲಾಗಿದೆ.
ವೃತ್ತಿಯಲ್ಲಿ ಗುತ್ತಿಗೆದಾರರಾಗಿರುವ ವಿನಾಯಕ ಬಾಳಿಗ ಕಳೆದ ಕೆಲವು ಸಮಯಗಳಿಂದ ಮಾಹಿತಿ ಹಕ್ಕು ಕಾರ್ಯಕರ್ತನಾಗಿ ಕೆಲವರ ಅಕ್ರಮಗಳನ್ನು ಬಯಲಿಗೆಳೆದಿದ್ದರು ಎನ್ನಲಾಗಿದೆ. ಅಲ್ಲದೆ, ವೆಂಕಟರಮಣ ದೇವಸ್ಥಾನದ ಆಸ್ತಿ ದುರುಪಯೋಗಕ್ಕೆ ಸಂಬಂಧಿಸಿ ಹೈಕೋರ್ಟ್ ಮೊರೆ ಹೋಗಿದ್ದರು ಎಂದು ಹೇಳಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿ ದುಷ್ಕರ್ಮಿಗಳು ಇವರನ್ನು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಡಿಸಿಪಿ ಡಾ.ಸಂಜೀವ ಪಾಟೀಲ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News