ಕಡಬ ಸಮುದಾಯ ಆಸ್ಪತ್ರೆ ಕಾಮಗಾರಿ ಶೀಘ್ರ ಆರಂಭ: ಸಚಿವ ಖಾದರ್ ಭರವಸೆ
Update: 2016-05-03 11:30 GMT
ಕಡಬ, ಮೇ 3: ಇಲ್ಲಿನ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯು ಶೀಘ್ರವೇ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಭರವಸೆ ನೀಡಿದ್ದಾರೆ.
ಇತ್ತೀಚೆಗೆ ಆರೋಗ್ಯ ಸಚಿವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದ ನಿಯೋಗದ ಸದಸ್ಯರು ಕಡಬ ಆರೋಗ್ಯ ಕೇಂದ್ರದ ದುಸ್ಥಿತಿಯ ಬಗ್ಗೆ ಸಚಿವರ ಗಮನ ಸೆಳೆದರು. ಅಲ್ಲದೆ ಈ ಬಗ್ಗೆ ಪತ್ರಿಕೆಗಳಲ್ಲಿ ಬಂದ ವರದಿಗಳನ್ನು ಸಚಿವರಿಗೆ ತೋರಿಸಿದರು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಎರಡು ತಿಂಗಳೊಳಗೆ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ನಿಯೋಗದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯ ಕುಮಾರ್ ರೈ ಕರ್ಮಾಯಿ, ಡಿಸಿಸಿ ಸದಸ್ಯ ಎಚ್.ಕೆ.ಇಲ್ಯಾಸ್, ಪ್ರಮುಖರಾದ ಎನ್.ಎ. ಅಬೂಬಕರ್ ಆಲಂಕಾರು, ಕೃಷ್ಣಪ್ಪ ಗೌಡ, ಶೇಷಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.