ನಾಳೆಯಿಂದ ತೊಕ್ಕೊಟ್ಟಿನಲ್ಲಿ ಅಬ್ಬಕ್ಕ ಉತ್ಸವ
ಮಂಗಳೂರು, ಮೇ 5: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಈ ಬಾರಿ ಮೇ 7 ಮತ್ತು 8ರಂದು ತೆೊಕ್ಕೊಟ್ಟು ಸಮೀಪದ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
7ರಂದು ಮಧ್ಯಾಹ್ನ 2 ಗಂಟೆಗೆ ಅಂಬಿಕಾ ರಸ್ತೆಯ ಗಟ್ಟಿ ಸಮಾಜ ಭವನದಿಂದ ಸಮ್ಮೇಳನಾಂಗಣಕ್ಕೆ ಮಹಿಳಾ ಕಲಾ ತಂಡಗಳಿಂದ ‘ಜಾನಪದ ದಿಬ್ಬಣ’ ಸಾಂಸ್ಕೃತಿಕ ಮೆರವಣಿಗೆಯನ್ನು ಏರ್ಪಡಿಸಲಾಗಿದೆ. ಸಂಜೆ 5ಕ್ಕೆ ರಾಣಿ ಅಬ್ಬಕ್ಕ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀ ವೀರ ರಾಣಿ ಅಬ್ಬಕ್ಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಮೇ 8ರಂದು ಸಂಜೆ 5 ಗಂಟೆಗೆ ನಡೆಯುವ ಸಮಾರೋಪದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದು, ಹಿರಿಯ ಲೇಖಕಿ ಬಿ.ಎಂ.ರೋಹಿಣಿ ಅವರಿಗೆ ಅಬ್ಬಕ್ಕ ಪ್ರಶಸ್ತಿ ಹಾಗೂ ಕನ್ನಡ ಚಲನಚಿತ್ರ ನಟಿ ಹರಿಣಿ ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟು ಲಲಿತಾ ಜಯರಾಂ ಅವರಿಗೆ ಅಬ್ಬಕ್ಕ ಪುರಸ್ಕಾರ ಗಳನ್ನು ಪ್ರದಾನ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ದಿನಕರ್ ಉಳ್ಳಾಲ, ತುಳು ಅಕಾಡಮಿಯ ರಿಜಿಸ್ಟ್ರಾರ್ ನೋಡೆಲ್ ಅಧಿಕಾರಿ ಚಂದ್ರಹಾಸ ರೈ ಬಿ., ರಝಾಕ್, ಸುಹಾಸಿನಿ ಮೊದಲಾದವರು ಉಪಸ್ಥಿತರಿದ್ದರು.