ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ಕೊಲ್ಲೂರು, ಜು.12: ಇಲ್ಲಿನ ಸೌಪರ್ಣಿಕಾ ನದಿ ಸಮೀಪದ ಸ್ಮಶಾನದಲ್ಲಿರುವ ತೆರೆದ ಶೆಡ್ನಲ್ಲಿ ಸೋಮವಾರ ಸುಮಾರು 45ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
‘ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಸ್ಥಗಿತ ವೇತನ ಹೆಚ್ಚಳ’
ಮಂಗಳೂರು, ಜು.12: ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ 2012ರ ಎ.1ರಿಂದ ಅನ್ವಯವಾಗುವಂತೆ ಈಗಿರುವ 5 ಸ್ಥಗಿತ ವೇತನವನ್ನು 8ಕ್ಕೆ ಹೆಚ್ಚಿಸಲಾಗಿದೆ ಹಾಗೂ ಮಹಿಳಾ ಸಿಬ್ಬಂದಿಗೆ 135 ದಿನಗಳ ಪ್ರಸೂತಿ ರಜೆಯ ಅವಧಿಯನ್ನು 180 ದಿನಗಳಿಗೆ ಹೆಚ್ಚಿಸಿ ಸರಕಾರವು ಆದೇಶಿಸಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ.ಕೆ.ಮಂಜನಾಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅನುದಾನಿತ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಿದ್ದ ತಾರತಮ್ಯವನ್ನು ಹೋಗಲಾಡಿಸಿ ನ್ಯಾಯ ಒದಗಿಸಿದ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು, ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಹಾಗೂ ಜನಪ್ರತಿನಿಧಿಗಳಿಗೆ ಸಂಘ ಕೃತಜ್ಞತೆ ಸಲ್ಲಿಸಿದೆ.