ದಕ್ಷಿಣ ಕನ್ನಡದಲ್ಲಿ ಸಮೀಕ್ಷೆಗೆ ಸೂಚನೆ
ಮಂಗಳೂರು, ಜು.14: ಜೀತಪದ್ಧತಿ ನಿರ್ಮೂ ಲನೆ ಕಾಯ್ದೆ ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ದ.ಕ. ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಜೀತ ಪದ್ಧತಿ ನಿರ್ಮೂಲನೆ ಜಿಲ್ಲಾಮಟ್ಟದ ಜಾಗೃತ ಸಮಿತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಜೀತಪದ್ಧತಿ ನಿರ್ಮೂಲನೆ ಕಾಯ್ದೆಯಡಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿ, ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮಂಗಳೂರು ಹಾಗೂ ಪುತ್ತೂರು ಉಪ ವಿಭಾಗ ಮಟ್ಟದ ಸಮಿತಿ ರಚಿಸಲಾಗಿದೆ. ಸರಕಾರೇತರ ಸಂಘಸಂಸ್ಥೆ ಹಾಗೂ ಸಮಾಜ ಸೇವಕರಿಗೆ ಈ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಲು ತರಬೇತಿ ಹಮ್ಮಿಕೊಳ್ಳುವಂತೆ ಕಾರ್ಮಿಕ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿ, ಜೀತದಲ್ಲಿರುವವರನ್ನು ಪತ್ತೆ ಹಚ್ಚಿ, ಅವರಿಗೆ ಸೂಕ್ತ ಪುನರ್ವಸತಿ ಹಾಗೂ ಪರಿಹಾರ ವ್ಯವಸ್ಥೆ ಕಲ್ಪಿಸುವಂತೆ ಆದೇಶಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೇದಮೂರ್ತಿ, ಮಂಗಳೂರು ಸಹಾಯಕ ಆಯುಕ್ತ ಡಾ. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.