ಬೆಳ್ತಂಗಡಿ: ಪತ್ನಿಯ ಕೊಲೆಗೆ ಯತ್ನಿಸಿ ಆತ್ಮಹತ್ಯೆಗೆ ಶರಣಾದ ಪತಿ

Update: 2016-10-20 15:34 GMT

ಬೆಳ್ತಂಗಡಿ, ಅ.20: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಸಮೀಪ ಕೊಲ್ಪೆದ ಬೈಲು ಎಂಬಲ್ಲಿ ಗುರುವಾರ ಸಂಭವಿಸಿದೆ.

ಕೇರಳ ಮೂಲದ ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಶಾಜಿ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿಯಾಗಿದ್ದಾನೆ ಎನ್ನಲಾಗಿದೆ. ಪತಿ-ಪತ್ನಿ ಕೊಲ್ಪೆದ ಬೈಲಿನಲ್ಲಿ ಬಾಡಿಗೆ ಮನೆಯಲ್ಲಿ ಕಳೆದ ಕೆಲ ಸಮಯದಿಂದ ವಾಸಿಸುತ್ತಿದ್ದರು. ಈಕೆ ಬ್ಯೂಟಿ ಪಾರ್ಲರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಬುಧವಾರ ಸಂಜೆಯ ವೇಳೆ ಪತಿ ಪತ್ನಿಯರ ನಡುವೆ ಗಲಾಟೆ ನಡೆದಿದ್ದು ಶಾಜಿ ಮಾರಕಾಸ್ತ್ರಗಳಿಂದ ಪತ್ನಿಗೆ ಹಲ್ಲೆ ಮಾಡಿದ್ದಾನೆ. ಆಕೆಯ ತಲೆ ಕೈ ಹಾಗೂ ದೇಹದ ಮೇಲೆಲ್ಲ ಗಾಯಗಳಾಗಿದ್ದು, ಬಳಿಕ ಆತ ಮನೆಯಿಂದ ಹೊರ ಹೋಗಿದ್ದಾನೆ ಎನ್ನಲಾಗಿದೆ. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಆಕೆ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ನಡುವೆ ಗುರುವಾರ ಶಾಜಿ ಮನೆಯ ಸಮೀಪವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಈತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದ್ದು, ಈತ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈತ ಕೆಲ ತಿಂಗಳುಗಳ ಹಿಂದೆ ಬೆಳ್ತಂಗಡಿ ಸಮೀಪ ಲಾಯಿಲದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವೇಳೆ ಯುವತಿಯೋರ್ವಳಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದ ಲಾಯಿಲ ನಿನ್ನಿಕಲ್ಲು ನಿವಾಸಿ ಅಶೋಕ್ ಎಂಬವರ ಮೇಲೆ ಆಸಿಡ್ ಎರಚಿ ಗಂಭೀರ ಗಾಯಗೊಳಿಸಿದ್ದ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶಾಜಿಯನ್ನು ಪೊಲೀಸರು ಬಂಧಿಸಿದ್ದರು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ಎನ್ನಲಾಗಿದೆ. ಇದಲ್ಲದೆ ಇನ್ನೂ ಕೆಲವು ಕ್ರಿಮಿನಲ್ ಪ್ರಕರಣಗಳು ಆತ ವಿರುದ್ದ ಇದೆಯೆಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News