ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆಗೆ 10 ಕೋಟಿ ರೂ.: ಸಚಿವ ಪ್ರಮೋದ್

Update: 2017-08-20 07:07 GMT

ಉಡುಪಿ, ಆ.20: ರಾಜ್ಯದಲ್ಲಿನ ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ , ಅವರಿಗೆ ಅಗತ್ಯ ತರಬೇತಿ ನೀಡಲು ರಾಜ್ಯ ಸರಕಾರ 10 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ತಾಲೂಕು ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಆಯೋಜಿಸಿದ್ದ , ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

 ರಾಜ್ಯ ಸರಕಾರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಅಗತ್ಯ ತರಬೇತಿ ಮತ್ತು ನೆರವು ನೀಡಲಾಗುತ್ತಿದೆ. ಸಹಸ್ರ ಕ್ರೀಡಾ ಪ್ರತಿಭಾ ಯೋಜನೆಯಡಿ, 19 ವರ್ಷದೊಳಗಿನ ಪ್ರತಿಭಾವಂತ 750 ಹಾಗೂ 19 ವರ್ಷ ಮೇಲ್ಪಟ್ಟ ಪ್ರತಿಭಾವಂತ 250 ಕ್ರೀಡಾಪಟುಗಳು ಸೇರಿದಂತೆ ಒಟ್ಟು 1,000 ಕ್ರೀಡಾ ಪಟುಗಳ ಆಯ್ಕಗೆ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುತ್ತಿದೆ. ರಾಜ್ಯದ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪದಕ ಪಡೆಯುವ ಗುರಿ ಹೊಂದಿರಬೇಕು. ಇದಕ್ಕಾಗಿ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸರಕಾರ ಒದಗಿಸುತ್ತದೆ ಎಂದು ಸಚಿವರು ಹೇಳಿದರು.

ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ನಗರಸಭಾ ಸದಸ್ಯ ಯಶ್ ಪಾಲ್ ಸುವರ್ಣ, ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿಕಾಂತ್ ಪಡುಬಿದ್ರೆ , ಕ್ರೀಡಾ ಇಲಾಖೆಯ ನಾರಾಯಣ ರಾವ್ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News