ಗಾಂಜಾ ಸಾಗಾಟಕ್ಕೆ ಯತ್ನ: ಆರೋಪಿ ಬಂಧನ
Update: 2017-09-17 16:27 GMT
ಮಂಗಳೂರು, ಸೆ. 17: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದೋಹಾಕ್ಕೆ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದು, ತಪ್ಪಿಸಿಕೊಂಡಿದ್ದ ಕಾಸರಗೋಡು ಕುಡ್ಲುಕಡಪ್ಪುರಂನ ಮುಹಮ್ಮದ್ ಹನೀಫ್ (35)ನನ್ನು ವಿಶೇಷ ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಈತ ದೋಹಾಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ತೆರಳಲು ಶುಕ್ರವಾರ ಸಂಜೆ 5.30ರ ವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ಕಸ್ಟಮ್ಸ್ ಅಧಿಕಾರಿಗಳು ಲಗೇಜ್ ತಪಾಸಣೆ ಮಾಡುವಾಗ ಗಾಂಜಾದೊಂದಿಗೆ ಸಿಕ್ಕಿಬಿದ್ದಿದ್ದ. ಈತನನ್ನು ವಶಕ್ಕೆ ಪಡೆದಿದ್ದ ಅಧಿಕಾರಿಗಳು ಇತರ ಪ್ರಯಾಣಿಕರನ್ನು ತಪಾಸಣೆ ಮಾಡುವ ಸಂದರ್ಭದಲ್ಲಿ ತಪ್ಪಿಸಿಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಕಾರ್ಯಪ್ರವೃತ್ತರಾದ ವಿಶೇಷ ಅಧಿಕಾರಿಗಳ ತಂಡ ಶನಿವಾರ ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.