ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸರಕಾರದಿಂದ ಕಠಿಣ ಕ್ರಮ: ಯು.ಟಿ.ಖಾದರ್
Update: 2017-09-19 11:30 GMT
ಮಂಗಳೂರು, ಸೆ.19: ಜಿಲ್ಲೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿ, ಕಾನೂನು ಕೈಗೆತ್ತಿಕೊಳ್ಳುವ ಬೆದರಿಕೆ ಒಡ್ಡುತ್ತಿರುವವರ ವಿರುದ್ಧ ಸರಕಾರ ಕಠಿಣ ಕ್ರಮ ಕೈ ಗೊಳ್ಳುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಪತ್ರಿಕೆಗೆ ತಿಳಿಸಿದ್ದಾರೆ.
ಪುತ್ತೂರು ತಾಲೂಕಿನ ಸಂಪ್ಯ ಠಾಣೆಯ ಎಸ್ಸೈ ಖಾದರ್ ಹಾಗೂ ಇತರ ಸಿಬ್ಬಂದಿಗಳ ವಿರುದ್ಧ ಪ್ರಚೋದನಕಾರಿಯಾಗಿ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ರೀತಿಯಲ್ಲಿ ಪುತ್ತೂರಿನಲ್ಲಿ ಸಾರ್ವಜನಿಕವಾಗಿ ಹೇಳಿಕೆ ನೀಡಿರುವ ಜಗದೀಶ್ ಕಾರಂತ್ ವಿರುದ್ಧ ಈಗಾಗಲೇ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವುದಾಗಿ ಈ ಬಗ್ಗೆ ವಿಚಾರಿಸಿದಾಗ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವುದಕ್ಕೆ ಸರಕಾರ ಅವಕಾಶ ನೀಡುವುದಿಲ್ಲ. ಈ ರೀತಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿರುವುದಾಗಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.