ಕುಂಡಾಜೆಯಲ್ಲಿ ಎರಡು ಗುಂಪುಗಳ ನಡುವೆ ಸಂಘರ್ಷ
ಕಡಬ, ಸೆ.24: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ರಾಮಕುಂಜ ಗ್ರಾಮದ ಕುಂಡಾಜೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ.
ಉಪ್ಪಿನಂಗಡಿ-ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂಡಾಜೆಯಲ್ಲಿ ವಾಹನಕ್ಕೆ ದಾರಿ ಬಿಡುವ ವಿಚಾರದಲ್ಲಿ ಎರಡು ಕೋಮುಗಳ ಜನರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೆಲ ಪ್ರಮುಖರು ಮಧ್ಯಪ್ರವೇಶಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು. ಬಳಿಕ ರಾಜ್ಯ ಹೆದ್ದಾರಿಯ ರಾಮಕುಂಜ ಕ್ರಾಸ್ ಎಂಬಲ್ಲಿ ಜಮಾಯಿಸಿದ ಎರಡು ಗುಂಪುಗಳಲ್ಲಿದ್ದವರು ಪರಸ್ಪರ ಹಲ್ಲೆ ನಡೆಸಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾಠಿ ಬೀಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆಯಿಂದಾಗಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಗುಂಪು ಚದುರಿ ಹೋದರೂ ಮತ್ತೆ ಸಂಘರ್ಷವಾಗುವ ಸಾಧ್ಯತೆಯಿರುವುದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಅನಿಲ್ ಕುಲಕರ್ಣಿ, ಕಡಬ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ ಭೇಟಿ ನೀಡಿದ್ದಾರೆ. ಈ ಬಗ್ಗೆ ಯಾವುದೆ ಪ್ರಕರಣ ದಾಖಲಾಗಿಲ್ಲ.