ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣಪತ್ರ: ಕ್ರಮಕ್ಕೆ ದಸಂಸ ಆಗ್ರಹ
ಉಡುಪಿ, ಸೆ.26: ಬೋವಿ ಜನಾಂಗದವರು ನಕಲಿ ದಾಖಲೆಗಳನ್ನು ಸೃಷ್ಠಿಸಿ ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆಯುತ್ತಿರುವ ಬಗ್ಗೆ ಕಠಿಣ ಕಾನೂನು ಕ್ರಮ ಜರಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮಘರ್ಜನೆ) ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಉಡುಪಿ ಜಿಲ್ಲೆಯಲ್ಲಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಬೋವಿ ಜನಾಂಗದ ವರು ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು, ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದಾರೆ. 1950ರಲ್ಲಿ ‘ಭೋವಿ’ ಜನಾಂಗವನ್ನು ಪರಿಶಿಷ್ಟ ಜಾತಿ ಎಂಬುದಾಗಿ ಪರಿಗಣಿಸಲಾಗಿದ್ದು, ಇದರಿಂದ ಹಿಂದುಳಿದವರ್ಗಕ್ಕೆ ಸೇರಿದ ಬೋವಿ ಜಾತಿಯವರು ಕೂಡ ಪರಿಶಿಷ್ಟ ಜಾತಿ ಎಂದು ಸುಳ್ಳು ಪ್ರಮಾಣ ಪತ್ರ ಪಡೆಯುತ್ತಿದ್ದಾರೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಚಂದ್ರ ಆಲ್ತಾರ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಅಧಿಕಾರಿಗಳು ಯಾವುದೇ ರಾಜಕೀಯ, ಪ್ರಭಾವಿ ಮುಖಂಡರ, ದಳ್ಳಾಳಿಗಳ ಒತ್ತಡಕ್ಕೆ ಮಣಿಯದೆ ಅಗತ್ಯ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸ ಬೇಕು. ಸುಳ್ಳು ಜಾತಿ ಪ್ರಮಾಣಪತ್ರವನ್ನು ನಿರ್ದಾಕ್ಷಿಣ್ಯವಾಗಿ ರದ್ದುಗೊಳಿಸಿ ಜಾತಿ ಪ್ರಮಾಣಪತ್ರವನ್ನು ಪಡೆದವರ ಮೇಲೆ ಹಾಗೂ ಅವರಿಗೆ ಪ್ರೇರೆಪಿಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಿ ಕಾನೂನು ರೀತಿಯ ಹೋರಾಟ ನಡೆಸಲಾಗು ವುದು ಎಂದು ಅವರು ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.