​ಅ.2: ‘ಮಾತೃಪೂರ್ಣ’ ಯೋಜನೆಗೆ ಚಾಲನೆ

Update: 2017-09-27 14:17 GMT

ಮಂಗಳೂರು, ಸೆ. 27: ಅಂಗನವಾಡಿಗಳಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಆಹಾರ (ಬಿಸಿ ಊಟ) ನೀಡುವ ಮಾತೃಪೂರ್ಣ ಯೋಜನೆ ಅ.2ರ ಗಾಂಧಿ ಜಯಂತಿಯಂದು ಜಿಲ್ಲೆಯಲ್ಲಿ ಚಾಲನೆ ದೊರೆಯಲಿದೆ.

ಅಂದು ಅಪರಾಹ್ನ 2 ಗಂಟೆಗೆ ಬಂಟ್ವಾಳ ತಾಲೂಕಿನ ನರಿಕೊಂಬು ಅಂಗನವಾಡಿಯಲ್ಲಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ರಾಜ್ಯ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಗರ್ಭಿಣಿಯರಿಗೆ ಹಾಗೂ ಬಾಣಂತಿಯರ ಆರೋಗ್ಯದಲ್ಲಿನ ಪೌಷ್ಟಿಕಾಂಶದ ಸುಧಾರಣೆಗೆ ಅಂಗನವಾಡಿ ಕೇಂದ್ರಗಳಲ್ಲಿಯೇ ಅಡುಗೆ ತಯಾರಿಸಿ ಮಧ್ಯಾಹ್ನದ ಸಮಯದಲ್ಲಿ ಕೊಡಲ್ಪಡುವ ವೈಶಿಷ್ಠ ಪೂರ್ಣ ಯೋಜನೆಯಾಗಿದೆ. ಈ ಯೋಜನೆಯಡಿ ಮಧ್ಯಾಹ್ನದ ಪೌಷ್ಟಿಕ ಬಿಸಿ ಊಟದಲ್ಲಿ ಅನ್ನ, ಸಾಂಬರ್, ಪಲ್ಯದ ಜೊತೆಗೆ ಬೇಯಿಸಿದ ಮೊಟ್ಟೆ ಮತ್ತು ಹಾಲು ಒಳಗೊಂಡಿದೆ. ಪ್ರತೀ ತಿಂಗಳಿನಲ್ಲಿ 25 ದಿನಗಳಂತೆ, ವರ್ಷದಲ್ಲಿ ಒಟ್ಟು 300 ದಿನಗಳು ಪೌಷ್ಟಿಕ ಆಹಾರ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಮೊಳಕೆ ಬರಿಸಿದ ಕಾಳು ಕೊಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News