ಅ.29: ಡಾ. ಎಂ.ಎನ್. ರಾಜೇಂದ್ರಕುಮಾರ್‌ಗೆ ಪುತ್ತೂರಿನಲ್ಲಿ ಅಭಿನಂದನೆ

Update: 2017-10-26 18:33 GMT

ಪುತ್ತೂರು, ಅ. 26: ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಳಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುವ ಸಹಕಾರಿ ಧುರೀಣ ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರಿಗೆ ಅ.29ರಂದು ಪುತ್ತೂರು ತಾಲೂಕು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ತಿಳಿಸಿದ್ದಾರೆ

ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪುತ್ತೂರು ಟೌನ್‌ಬ್ಯಾಂಕ್ ಸಭಾಂಗಣದಲ್ಲಿ ಅ.29ರಂದು ಅಪರಾಹ್ನ 2.30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡುವ ಮೂಲಕ ಸಹಕಾರಿ ಕ್ಷೇತ್ರಕ್ಕೊಂದು ಹೊಸ ಆಯಾಮ ನೀಡಿರುವ ಮತ್ತು ಸಹಕಾರಿ ಕ್ಷೇತ್ರದಲ್ಲಿ ಪ್ರಥಮವಾಗಿ ರಾಷ್ಟ್ರಮಟ್ಟದಲ್ಲಿ ‘ಬೆಸ್ಟ್ ಚೆಯರ್‌ಮ್ಯಾನ್’ ಪ್ರಶಸ್ತಿ ಪುರಸ್ಕೃತರಾಗಿರುವ ಎಂ.ಎನ್. ರಾಜೇಂದ್ರಕುಮಾರ್ ಅವರನ್ನು ತಾಲ್ಲೂಕಿನ ಎಲ್ಲಾ ಸಹಕಾರ ಸಂಘಗಳ ವತಿಯಿಂದ ಅಭಿನಂದಿಸಿ ಗೌರವಿಸಲಾಗುವುದು ಎಂದರು.

ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಸಹಕಾರಿ ಯೂನಿಯನ್ ಅಧ್ಯಕ್ಷ ಶಿವರಾಮ ಕಜೆ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಸ್.ಬಿ.ಜಯರಾಮ ರೈ ಮತ್ತು ಶಶಿಕುಮಾರ್ ರೈ ಬಾಲ್ಯೊಟ್ಟು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News