ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ
Update: 2018-02-05 17:20 GMT
ತುಮಕೂರು,ಫೆ.05: ವ್ಯಕ್ತಿಯೊಬ್ಬನನ್ನು ಡ್ರಾಗನ್ನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕೊಲೆಯಾಗಿರುವ ವ್ಯಕ್ತಿಯನ್ನು ನದೀಮ್(36) ಎಂದು ಗುರುತಿಸಲಾಗಿದ್ದು, ನಗರದ ಹೃದಯ ಭಾಗವಾದ ಬಸ್ ನಿಲ್ದಾಣದ ಸಮೀಪ ನದೀಮ್ ಮತ್ತು ಈತನ ಸ್ನೇಹಿತರ ಜೊತೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಸ್ನೇಹಿತರು ಡ್ರಾಗನ್ ನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಅಲ್ಲಿದ್ದ ಕೆಲ ಸ್ಥಳೀಯರು ನಗರ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ನದೀಂನನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುವಂತೆ ಅಲ್ಲಿನ ವೈದ್ಯರು ತಿಳಿಸಿದ್ದು, ಬೆಂಗಳೂರಿಗೆ ಕರೆದೊಯ್ಯುವ ವೇಳೆ ಮಾರ್ಗಮದ್ಯೆ ಮೃತಪಟ್ಟಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಗರಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.