ಸುಂಟಿಕೊಪ್ಪ: ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ ಕಾರ್ಯಕ್ರಮ

Update: 2018-02-18 13:07 GMT

ಸುಂಟಿಕೊಪ್ಪ,ಫೆ.18: ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಂಡು ಕಠಿಣ ಪರಿಶ್ರಮ ಮತ್ತು ಸತತ ಅಭ್ಯಾಸ ಮಾಡಿದರೆ ಪರೀಕ್ಷೆಯಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಲೆಕ್ಕಪರಿಶೋಧಕರಾದ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆಯ ಮಾಜಿ ಅಧ್ಯಕ್ಷರಾದ ಸಂಪನ್ಮೂಲ ವ್ಯಕ್ತಿ  ಪಿ. ಡಬ್ಲ್ಯೂ. ಫ್ರಾನ್ಸಿಸ್ ಹೇಳಿದರು. 

ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆ ವತಿಯಿಂದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ತಯಾರಿ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹೇಗೆ ಪೂರ್ವಸಿದ್ಧತೆ ನಡೆಸಬೇಕು ಎಂಬ ಕುರಿತು ಮಾಹಿತಿ ನೀಡಿದರು.

ಪರೀಕ್ಷೆಗೆ ಪ್ರತಿನಿತ್ಯ ವೇಳಾಪಟ್ಟಿ ತಯಾರಿಸಿಕೊಂಡು ನಿಯಮಿತವಾಗಿ ಅಭ್ಯಾಸ ಮಾಡಬೇಕು. ಪರೀಕ್ಷೆ ಬಗ್ಗೆ ಯಾವುದೇ ಆತಂಕ ಮತ್ತು ಭಯ  ಪಡಬಾರದು. ಹಬ್ಬದ ಆಚರಣೆ ಮಾದರಿಯಲ್ಲಿ ಪರೀಕ್ಷೆಯನ್ನು ಸಂತಸದಿಂದ ಎದುರಿಸಬೇಕು ಎಂದರು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ್ಯ ಮಾಡದೆ ಕಲಿಕಾಂಶಗಳನ್ನು ಟಿಪ್ಪಣಿ ಮಾಡಿಕೊಂಡು ನಿರಂತರವಾಗಿ ಅಭ್ಯಾಸ ಮಾಡಿದರೆ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ. ಇದರಿಂದ ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ, ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ. ವಿದ್ಯಾರ್ಥಿಗಳು ಸತತ ಅಭ್ಯಾಸ ಮಾಡಿದರೆ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಜೆ.ಸಿ.ಐ.ಸಂಸ್ಥೆಯ ಅಧ್ಯಕ್ಷ ಎಚ್.ಆರ್. ಅರುಣ್‍ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಬೇಕು ಎಂಬ ದಿಸೆಯಲ್ಲಿ ಇಂತಹ ತರಬೇತಿ ಸಂಘಟಿಸಲಾಗಿದೆ ಎಂದರು.

ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಜೆ.ಸಿ.ಐ.ಸಂಸ್ಥೆಯ ಮಾಜಿ ಅಧ್ಯಕ್ಷೆ ಫೆಲ್ಸಿ ಡೆನಿಸ್, ಕೋಶಾಧಿಕಾರಿ ನಿರಂಜನ್, ಸದಸ್ಯರಾದ ಪಿ.ಯು.ನಂದಕುಮಾರ್, ರಂಜಿತ್‍ಕುಮಾರ್, ಇತರರು ಇದ್ದರು.

ನಂತರ ವಿದ್ಯಾರ್ಥಿಗಳು ಪರೀಕ್ಷೆ ಸಿದ್ಧತೆ ಬಗ್ಗೆ ತರಬೇತುದಾರ ಫ್ರಾನ್ಸಿಸ್ ಅವರೊಂದಿಗೆ ಸಂವಾದ ನಡೆಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News