ಎಪ್ರಿಲ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ
ಹೊಸದಿಲ್ಲಿ, ಮಾ.17: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ 224 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಎಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.26, 27 ಹಾಗೂ 28ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಎಪ್ರಿಲ್ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.
ಗೆಲ್ಲುವ ಸಾಮರ್ಥ್ಯವಿದ್ದರೆ ಸಚಿವರ ಮಕ್ಕಳಿಗೂ ಟಿಕೆಟ್ ನೀಡಲಾಗುವುದು. ಮತದಾರರು ಬಯಸುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಬೇರೆ ಪಕ್ಷದಿಂದ ಬರುವ ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಎಸ್ಪಿ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ. ಮಾಯಾವತಿ ಉತ್ತರಪ್ರದೇಶದಲ್ಲಿ ಜನಪ್ರಿಯ ಇರಬಹುದು. ಆದರೆ, ನಮ್ಮ ರಾಜ್ಯದಲ್ಲಿ ಮಾಯಾವತಿ ಜನಪ್ರಿಯತೆ ಪ್ರಭಾವ ಬೀರುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು. ಈ ಹಿನ್ನೆಲೆಯಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳು ಒಂದಾಗಿ ಬಿಜೆಪಿಯನ್ನು ಎದುರಿಸಲಿವೆ ಎಂದು ಮುಖ್ಯಮಂತ್ರಿ ಹೇಳಿದರು.