ಬೆಂಗಳೂರು: ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಮೃತ್ಯು
ಬೆಂಗಳೂರು, ಡಿ.19: ರಾಜಕಾಲುವೆ ಕಾಮಗಾರಿಯ ವೇಳೆ ಮಣ್ಣು ಕುಸಿದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮಡಿವಾಳಪ್ಪಗೌಡ (27) ಮೃತ ಕಾರ್ಮಿಕ. ಈತ ಕಲಬುರಗಿ ಜಿಲ್ಲೆಯ ಶಹಾಪುರ ತಾಲೂಕಿನ ಆಲಗಡಲಿ ಗ್ರಾಮದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರದ ಪದ್ಮಾವತಿ ಕಲ್ಯಾಣ ಮಂಟಪದ ಬಳಿ ಜಲಮಂಡಳಿ ವತಿಯಿಂದ ನೀರು ಸರಬರಾಜುಗಾಗಿ ಪೈಪ್ ಅಳವಡಿಕೆ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಗಾಗಿ ಮೂವರು ಕಾರ್ಮಿಕರು ರಾಜಕಾಲುವೆಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ಮೂವರ ಮೇಲೆಯೂ ಮಣ್ಣು ಕುಸಿದಿದೆ. ಕೂಡಲೇ ಇಬ್ಬರನ್ನು ಸ್ಥಳೀಯರು ಮೇಲೆತ್ತುವ ಮೂಲಕ ರಕ್ಷಣೆ ಮಾಡಿದ್ದಾರೆ. ಆದರೆ, ಮಡಿವಾಳಪ್ಪ ಮಣ್ಣಿನಡಿ ಸಿಲುಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಜೆಸಿಬಿ ಸಹಾಯದಿಂದ ಶವವನ್ನು ಹೊರ ತೆಗೆದಿದ್ದು, ಇಲ್ಲಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ ಎನ್ನಲಾಗಿದೆ.