ರೈತ ನಾಯಕರಿಂದ ಮುಖ್ಯಮಂತ್ರಿ ಭೇಟಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಬೆಂಗಳೂರು, ಜ.29: ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾ ಗೌಡ ಪಾಟೀಲ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನಿಯೋಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದೆ.
ಮಂಗಳವಾರ ನಗರದ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗ, ಯೂರಿಯಾ ನಿಷೇಧ ಮಾಡಿ, ಕೃಷಿ ಪರಿಕರಗಳ ನಿಷೇಧ ತೆರವು ಮಾಡಬೇಕು. ಬೆಳಗಾವಿ ಸುವರ್ಣ ಸೌಧದ ಬಳಿ ಕೃಷಿ ಪಾರ್ಕ್ ನಿರ್ಮಾಣ ಮಾಡಬೇಕು ಹಾಗೂ ರೈತರ ಜಮೀನುಗಳ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯ ಮಾಡಿದೆ.
ವಯೋವೃದ್ಧರಿಗೆ ಉಚಿತ ಗ್ಯಾಸ್ ಹಾಗೂ ಪಡಿತರ ವಿತರಿಸಬೇಕು. ಆರು ತಿಂಗಳಿಗೊಮ್ಮೆ ರಕ್ತಹೀನತೆಯಿಂದ ಬಳಲುವವರಿಗೆ ಉಚಿತ ಔಷಧಿ ವಿತರಿಸಬೇಕು. ತೊಗರಿ, ಕಡಲೆ, ಜೋಳ, ಭತ್ತಕ್ಕೆ ಬೆಂಬಲ ಬೆಲೆ ನೀಡಿ ಸುಗ್ಗಿ ಮುಂಚಿತವಾಗಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಮನವಿ ಸಲ್ಲಿಸಿದೆ.
ಗ್ರಾ.ಪಂ.ವ್ಯಾಪ್ತಿಯಲ್ಲಿ 10ನೇ ತರಗತಿ ಒಳಗಿನ ಮಕ್ಕಳಿಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸಲು ತಿದ್ದುಪಡಿ ತರಬೇಕು. ಬರಗಾಲದಿಂದ ಜನ ಗುಳೇ ಹೋಗುತ್ತಿದ್ದು, ಇದಕ್ಕೆ ಪರಿಹಾರ ಒದಗಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿದರು.