ವಿಧಾನ ಪರಿಷತ್ತಿನ ನಾಮರ್ದೇಶಿತ ಸದಸ್ಯರಾಗಿ ತಿಪ್ಪೇಸ್ವಾಮಿ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಜ. 30: ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ನಿವೃತ್ತ ಅಧಿಕಾರಿ ಕೆ.ಎಸ್.ತಿಪ್ಪೇಸ್ವಾಮಿ ಅವರು ಇಂದು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.
ಬುಧವಾರ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಅವರು, ತಿಪ್ಪೇಸ್ವಾಮಿಯವರಿಗೆ ಅಧಿಕಾರ ಹಾಗೂ ಗೌಪ್ಯತೆ ಪ್ರಮಾಣ ವಚನವನ್ನು ಬೋಧಿಸಿದರು.
ಸಿಎಂ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಎಚ್.ಡಿ.ರೇವಣ್ಣ, ಪುಟ್ಟರಾಜು, ಸಾ.ರಾ.ಮಹೇಶ್, ಕೆಪಿಎಸ್ಸಿ ಮಾಜಿ ಅಧ್ಯಕ್ಷ ಡಾ. ಎಚ್.ಎನ್.ಕೃಷ್ಣ, ಕಾರ್ಯದರ್ಶಿ ಮಹಾಲಕ್ಷ್ಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ ನೂತನ ಸದಸ್ಯ ತಿಪ್ಪೇಸ್ವಾಮಿ ಅವರನ್ನು ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
ಹಾಸನ ಮೂಲದ ಹಿರಿಯ ಅಧಿಕಾರಿ ಕೆ.ಎಸ್.ತಿಪ್ಪೇಸ್ವಾಮಿ, ದೇವೇಗೌಡ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು. ಕೆಲವು ದಿನಗಳ ಹಿಂದೆ ತಿಪ್ಪೇಸ್ವಾಮಿ ಅವರ ಹೆಸರನ್ನು ಮೇಲ್ಮನೆಯ ನಾಮನಿರ್ದೇಶಿತ ಸ್ಥಾನಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಿತ್ತು.