ಹಾಸನದಲ್ಲಿ ಮಳೆಯ ಪ್ರಮಾಣ ಹೆಚ್ಚಳ: ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

Update: 2019-08-07 18:14 GMT

ಹಾಸನ,ಆ.07: ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಕೃತಿ ವಿಕೋಪದ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ನಡೆದ  ಸಭೆಯಲ್ಲಿ ಮಾತನಾಡಿದ ಅವರು, ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಎಲ್ಲಾ ಅಪಾಯಗಳನ್ನು ಎದುರಿಸಲು ಪ್ರತಿ ತಾಲೂಕಿನಲ್ಲಿ ವಿಶೇಷ ತಂಡ ರಚನೆಯಾಗಬೇಕು. ತುರ್ತು ನಿರ್ವಹಣೆಗೆ ಸಹಾಯವಾಣಿಗಳಲ್ಲಿ ದಿನದ 24 ಗಂಟೆಗಳೂ ಜಾಗೃತರಾಗಿದ್ದು ಸೇವೆ ಒದಗಿಸಬೇಕೆಂದು ಎಂದು ತಿಳಿಸಿದರು.

ಸಕಲೇಶಪುರ, ಆಲೂರು, ಬೇಲೂರು ತಾಲೂಕುಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಅಗ್ನಿಶಾಮಕದಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಹೆಚ್ಚಿನ ಗಮನಹರಿಸಬೇಕಿದ್ದು, ಪ್ರಕೃತಿ ವಿಕೋಪ ಸಂಭವಿಸಬಹುದಾದ ಸ್ಥಳಗಳನ್ನು ಪತ್ತೆ ಹಚ್ಚಿ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಸ್ಥಳೀಯರಿಂದ ಪ್ರಕೃತಿ ವಿಕೋಪದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಅಲ್ಲಿನ ಜನ ಜೀವನದ ವ್ಯವಸ್ಥೆಯನ್ನು ಗಮನಿಸಲು ಸ್ಥಾಪಿತವಾಗಿರುವ ಸಹಾಯವಾಣಿ ಕೇಂದ್ರಗಳು ಚಾಲ್ತಿಯಲ್ಲಿರುವಂತೆ ಗಮನಹರಿಸಬೇಕು. ಸಾರ್ವಜನಿಕರಿಂದ ಹಾಗೂ ಸಹಾಯವಾಣಿ ಕೇಂದ್ರಗಳಿಂದ ಪ್ರತಿ ಮಾಹಿತಿ ಸಂಗ್ರಹಿಸಲು ನೆಟ್‍ವರ್ಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ ತಾಲೂಕುಗಳನ್ನು ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು ತಾಲೂಕು ಮಟ್ಟದ ಅಧಿಕಾರಿಗಳು ಸೂಕ್ತ ಮುಂಜಾಗೃತಾ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದರು.

ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳಿಗೆ ರಬ್ಬರ್ ಬೋಟ್, ಲೈಟಿಂಗ್, ಪವರ್ ಗರಗಸ ಒದಗಿಸಿ ನಿರಾಶ್ರಿತ ಕೇಂದ್ರಗಳ ವ್ಯವಸ್ಥೆಗೆ ಸೂಕ್ತ ಪರ್ಯಾಯಗಳನ್ನು ಆಯ್ಕೆ ಮಾಡಿಟ್ಟುಕೊಳ್ಳಬೇಕು ಎಂದರು.

ಬಿಸಿಲೆ ಮಾರ್ಗದಲ್ಲಿ ಸಂಭವನಿಯ ಅಪಾಯಗಳ ತಡೆಗೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ವಾಹನ ನಿಷೇಧಿಸಬೇಕು. ಶಿರಾಡಿ ಘಾಟ್‍ಗಳಲ್ಲಿ ಹೆಚ್ಚಿನ ಭೂಕುಸಿತಗಳು ಸಂಬಂವಿಸುವುದರಿಂದ ಹೆಚ್ಚುವರಿ ತಂಡಗಳು ಸನ್ನದ್ಧವಾಗಿರಬೇಕು. ಅಲ್ಲದೆ, ಹೇಮಾವತಿ ಜಲಾಶಯಕ್ಕೆ ಆಗಮಿಸುವ ಸಾರ್ವಜನಿಕರ ಪ್ರವೇಶವನ್ನು ಸುರಕ್ಷತೆಯ ದೃಷ್ಠಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಅಗ್ನಿ ಶಾಮಕ ಇಲಾಖೆಗೆ ಅಗತ್ಯವಿರುವ ರಕ್ಷಣ ಸಾಧನಗಳನ್ನು ಒದಗಿಸಲಾಗುವುದು. ಆರೋಗ್ಯ ಇಲಾಖೆ ಎಲ್ಲಾ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಔಷದೋಪಚಾರಗಳೊಂದಿಗೆ ಸಿದ್ದರಾಗಿರಬೇಕು ಎಂದು ಅಕ್ರಂ ಪಾಷ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು ಈಗಾಗಲೇ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಮಾಹಿತಿ ಒದಗಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News