ಈಡಿ ಸಮನ್ಸ್ ರದ್ದುಕೋರಿ ಡಿಕೆಶಿ ಆಪ್ತರಿಂದ ಮೇಲ್ಮನವಿ ಅರ್ಜಿ: ತುರ್ತು ವಿಚಾರಣೆಗೆ ಹೈಕೋರ್ಟ್ ನಕಾರ
ಬೆಂಗಳೂರು, ಸೆ.3: ಹೊಸದಿಲ್ಲಿಯ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಮೂವರು ಆಪ್ತರು ಈಡಿ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.5ಕ್ಕೆ ಮುಂದೂಡಿದೆ.
ಅರ್ಜಿದಾರರಾದ ಆಂಜನೇಯ, ಸಚಿನ್ ನಾರಾಯಣ, ಸುನಿಲ್ ಶರ್ಮಾ ಪರ ವಕೀಲರು, ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿದರು. ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿ, ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.
ಜಾರಿ ನಿರ್ದೇಶನಾಲಯ(ಈಡಿ) ಅಧಿಕಾರಿಗಳೂ ಈಗಾಗಲೇ ಕೋರ್ಟ್ಗೆ ಕೆವಿಯಟ್ ಸಲ್ಲಿಕೆ ಮಾಡಿದ್ದು, ನಮ್ಮ ವಾದ ಆಲಿಸದೆ ಯಾವುದೇ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದೆ. ಡಿ.ಕೆ.ಶಿವಕುಮಾರ್ ಕೂಡ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಪ್ರಕರಣವೇನು: 2017ರ ಆ.2ರಂದು ಆದಾಯ ತೆರಿಗೆ(ಐಟಿ) ಅಧಿಕಾರಿಗಳು ಡಿಕೆಶಿ ಮತ್ತು ಆಪ್ತರ ಮನೆಗಳ ಮೇಲೆ ದಾಳಿ ಮಾಡಿ 8,59,69,100 ಮೊತ್ತವನ್ನು ಜಪ್ತಿ ಮಾಡಿದ್ದರು. ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ, ಸುನಿಲ್ಕುಮಾರ್ ಶರ್ಮಾ, ಆಂಜನೇಯ ಸೇರಿ ಇತರರ ವಿರುದ್ಧ ಆದಾಯ ತೆರಿಗೆ ಕಾಯ್ದೆ-1961ರ ಕಲಂ 277 ಮತ್ತು 278 ಹಾಗೂ ಐಪಿಸಿ ಕಲಂ 120 ಬಿ, 193 ಹಾಗೂ 199 ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಈಡಿ ಜಾರಿಗೊಳಿಸಿದ್ದ ಸಮನ್ಸ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಗಳನ್ನು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರವಷ್ಟೇ ವಜಾ ಮಾಡಿತ್ತು. ಮತ್ತೆ ಈಗ ಮೂವರು ಆರೋಪಿಗಳು ಸಮನ್ಸ್ ರದ್ದು ಕೋರಿ ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.