ನಿಯಂತ್ರಣ ಕೊಠಡಿಗಳಲ್ಲಿ ಅಧಿಕಾರಿಗಳ ಗೈರು: ಬಿಬಿಎಂಪಿ ಮೇಯರ್ ತರಾಟೆ
ಬೆಂಗಳೂರು, ಅ.5: ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಪಾಲಿಕೆಯ ನಿಯಂತ್ರಣ ಕೊಠಡಿಗಳಲ್ಲಿ ಗೈರು ಹಾಜರಾಗಿದ್ದ ಅಧಿಕಾರಿಗಳನ್ನು ಮೇಯರ್ ಗೌತಮ್ ಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಳೆ ಆರಂಭವಾಗುತ್ತಿದ್ದಂತೆಯೇ ನಿಯಂತ್ರಣ ಕೊಠಡಿಗಳಿಗೆ ಭೇಟಿ ನೀಡಿದ್ದಾರೆ. ಆದರೆ, ಸ್ಥಳದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಅಧಿಕಾರಿಗಳೇ ಇಲ್ಲದಿದ್ದರಿಂದ ಮೇಯರ್ ಅಹವಾಲು ಸ್ವೀಕರಿಸಿದ್ದಾರೆ. ಅನಂತರ ಬಿಬಿಎಂಪಿ ಪಶ್ಚಿಮ ವಲಯದ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದರು. ಅಲ್ಲಿಯೂ ಅಧಿಕಾರಿಗಳಿರಲಿಲ್ಲ. ಕೂಡಲೇ ಅಧಿಕಾರಿಗಳಿಗೆ ಕರೆ ಮಾಡಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಧಾರಾಕಾರ ಮಳೆ ಸುರಿಯುತ್ತಿದ್ದರಿಂದ ನಗರದಲ್ಲಿ ಜನರು ಸಾಕಷ್ಟು ತೊಂದರೆಗೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ನೀವು ಕರ್ತವ್ಯಕ್ಕೆ ಗೈರು ಹಾಜರಾಗಿದ್ದೀರಾ, ನಿಮಗೆ ಮನುಷ್ಯತ್ವ ಇಲ್ಲವಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಆಗಮಿಸುವಂತೆ ಸೂಚನೆ ನೀಡಿದ್ದು, ನಿಯಂತ್ರಣ ಕೊಠಡಿಗಳಲ್ಲಿ ಹಗಲು-ರಾತ್ರಿ ಎನ್ನದೇ ಕೆಲಸ ಮಾಡುವಂತೆ ಸೂಚಿಸಿದ್ದಾರೆ.