ಉಗ್ರರ ನುಸುಳಿಕೆ ವದಂತಿ: ಪೊಲೀಸರಿಂದ ಕಟ್ಟೆಚ್ಚರ

Update: 2019-10-06 18:07 GMT

ಮಂಡ್ಯ, ಅ.6: ಮೈಸೂರು ದಸರಾ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣಕ್ಕೆ ಶಂಕಿತ ಭಯೋತ್ಪಾದಕರು ನುಸುಳಿದ್ದಾರೆಂಬ ವದಂತಿ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಹಾಗು ಶ್ವಾನ ದಳದ ಸಿಬ್ಬಂದಿ ರವಿವಾರ ಶ್ರೀರಂಗಪಟ್ಟಣ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ರೆಸಾರ್ಟ್, ಲಾಡ್ಜ್, ಫಾರ್ಮ್ ಹೌಸ್‍ಗಳ ಸುತ್ತಮುತ್ತ ತಪಾಸಣೆ ನಡೆಸಿದರು.

ಮೈಸೂರು ದಸರಾದಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ನಾಲ್ವರು ಶಂಕಿತ ಉಗ್ರರನ್ನು ಶ್ರೀರಂಗಪಟ್ಟಣದಲ್ಲಿ ಆಂತರಿಕ ಭದ್ರತಾ ಪಡೆ ಬಂಧಿಸಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಸ್ಯಾಟಲೈಟ್ ಫೋನ್ ಬಳಕೆಯಾಗಿರುವುದರ ಹಿನ್ನೆಲೆಯಲ್ಲಿ ಕೇಂದ್ರ ಭದ್ರತಾ ಪಡೆಯಿಂದ ಶ್ರೀರಂಗಪಟ್ಟಣದಲ್ಲಿ ನಾಲ್ವರು ಶಂಕಿತ ಉಗ್ರರನ್ನು  ಬಂಧಿಸಲಾಗಿದೆ ಎಂಬ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಎಸ್ಪಿ ಪರುಶುರಾಂ ಸ್ಪಷ್ಟಪಡಿಸಿದ್ದಾರೆ.

ಮೈಸೂರು ದಸರಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಶ್ರೀರಂಗಪಟ್ಟಣದ ರೈಲ್ವೆ, ಬಸ್ ನಿಲ್ದಾಣ ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News