ಕೆಂಪು ಗುಲಾಬಿ ಈರುಳ್ಳಿ ರಫ್ತು ನಿಷೇಧ ಸಡಿಲಿಸಿದ ಕೇಂದ್ರಕ್ಕೆ ಡಿಸಿಎಂ ಅಶ್ವಥ್ ನಾರಾಯಣ ಕೃತಜ್ಞತೆ

Update: 2019-10-29 14:08 GMT

ಬೆಂಗಳೂರು, ಅ.29: ಕೆಂಪು ಗುಲಾಬಿ ಈರುಳ್ಳಿ ರಫ್ತು ಸಂಪೂರ್ಣ ನಿಷೇಧವನ್ನು ಸಡಿಲಗೊಳಿಸಿ ರಾಜ್ಯದ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರಕಾರಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಕೃತಜ್ಞತೆ ಸಲ್ಲಿಸಿದ್ದಾರೆ.

ಈರುಳ್ಳಿ ಬೆಲೆ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರಕಾರ ಈರುಳ್ಳಿ ರಫ್ತನ್ನು ಸಂಪೂರ್ಣ ನಿಷೇಧಿಸಿದ್ದರಿಂದ ರಾಜ್ಯದ ಕೆಂಪು ಗುಲಾಬಿ ಈರುಳ್ಳಿ ಬೆಳೆಗಾರರು ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಕೆಂಪು ಈರುಳ್ಳಿ ನಿಷೇಧ ತೆರುವುಗೊಳಿಸುವಂತೆ ರಾಜ್ಯ ಸರಕಾರ ಮಾಡಿದ್ದ ಮನವಿಗೆ ಕೇಂದ್ರ ಸ್ಪಂದಿಸಿ ನ.30ರವರೆಗೆ 9 ಸಾವಿರ ಟನ್ ವರೆಗೆ ರಫ್ತಿಗೆ ಅವಕಾಶ ನೀಡಿದೆ. ಇದರಿಂದ ರಾಜ್ಯದ ಈರುಳ್ಳಿ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೆಂಪು ಗುಲಾಬಿ ಈರುಳ್ಳಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದ್ದು, ರಫ್ತು ನಂಬಿಯೇ ರಾಜ್ಯದ ರೈತರು ಈ ಬೆಳೆ ಬೆಳೆಯುತ್ತಿದ್ದಾರೆ. ಆದ್ದರಿಂದ ರಫ್ತಿಗೆ ಯಾವುದೇ ನಿರ್ಬಂಧ ವಿಧಿಸದೇ ರೈತರ ನೆರವಿಗೆ ಧಾವಿಸಬೇಕು ಎಂದು ಉಪಮುಖ್ಯಮಂತ್ರಿ ಇದೇ ವೇಳೆ ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡಿದ್ದಾರೆ.

ಈರುಳ್ಳಿ ರಫ್ತಿಗೆ ವಿನಾಯಿತಿ ಪಡೆಯಲು ಕೇಂದ್ರ ವಾಣಿಜ್ಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು ಎಂದು ನಿನ್ನೆಯಷ್ಟೇ ಶಿಡ್ಲಘಟ್ಟದಲ್ಲಿ ಅಶ್ವಥನಾರಾಯಣ ರೈತರಿಗೆ ಭರವಸೆ ನೀಡಿದ್ದರು.

ನಿಬಂಧನೆ ಏನು?: ನವೆಂಬರ್ 30ರವರೆಗೆ 9 ಸಾವಿರ ಟನ್ ವರೆಗೆ ರಫ್ತಿಗೆ ಅವಕಾಶ ನೀಡಲಾಗಿದೆ ಎಂದು ವಿದೇಶ ವ್ಯಾಪಾರ ಮಹಾನಿರ್ದೇಶನಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ. ಚೆನ್ನೈ ಬಂದರಿನ ಮೂಲಕ ಮಾತ್ರ ರಫ್ತು ಮಾಡಬೇಕು. ರಾಜ್ಯದ ತೋಟಗಾರಿಕೆ ಇಲಾಖೆ ಆಯುಕ್ತರು ಈರುಳ್ಳಿಗೆ ಮತ್ತು ರಫ್ತಿಗೆ ಪ್ರಮಾಣ ಪತ್ರ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಇರುವ ಹೆಚ್ಚುವರಿ ಮಹಾನಿರ್ದೇಶನಾಲಯವು ರಫ್ತಿನ ಮೇಲೆ ನಿಗಾ ಇರಿಸಲಿದೆ.

ನಿಷೇಧ ಏಕಿತ್ತು?: ಆಗಸ್ಟ್ ತಿಂಗಳಿನಿಂದ ಏರಿಕೆಯ ಹಾದಿಯಲ್ಲಿದ್ದ ಈರುಳ್ಳಿಯ ಬೆಲೆ ಏರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೆಚ್ಚಾಗಿ ಬೆಳೆಯುವ ಕೆಂಪು ಗುಲಾಬಿ ಈರುಳ್ಳಿ ರಫ್ತಿಗೆ ಸೆಪ್ಟೆಂಬರ್ ತಿಂಗಳಿನಿಂದ ನಿಷೇಧಿಸಲಾಗಿತ್ತು. ಈಗ ರಫ್ತು ನಿಷೇಧಕ್ಕೆ ವಿನಾಯ್ತಿ ನೀಡಲಾಗಿದೆ.

ರಫ್ತು ಎಲ್ಲಿಗೆ?: ಗಾತ್ರದಲ್ಲಿ ಚಿಕ್ಕದಿರುವ ಗುಲಾಬಿ ಬಣ್ಣದ ಈರುಳ್ಳಿಯನ್ನು ಹೆಚ್ಚಾಗಿ ಶ್ರೀಲಂಕಾ, ಮಲೇಷ್ಯಾ ಮತ್ತಿತರ ದಕ್ಷಿಣ ಪೂರ್ವ ಏಷ್ಯಾ ದೇಶಗಳಿಗೆ ರಫ್ತು ಮಾಡಲಾಗುತ್ತದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News