ಬೆಳಗಾವಿಯ ಕನ್ನಡ ರಾಜ್ಯೋತ್ಸವ ಆಚರಣೆಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಿ: ಹೈಕೋರ್ಟ್

Update: 2019-10-30 14:18 GMT

ಬೆಂಗಳೂರು, ಅ.30: ಬೆಳಗಾವಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು, ಬಿಗಿ ಪೊಲೀಸ್ ಭದ್ರತೆ ಹಾಗೂ ರಕ್ಷಣೆ ಒದಗಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಕನ್ನಡ ರಾಜ್ಯೋತ್ಸವ ಆಚರಣೆ ದಿನದಂದೇ ಪ್ರತಿವರ್ಷ ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನ ಆಚರಣೆ ಮಾಡುತ್ತದೆ, ಮೆರವಣಿಗೆ ನಡೆಸುವ ಸಮಿತಿಯ ಕಾರ್ಯಕರ್ತರು ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುತ್ತಾರೆ. ಕನ್ನಡ ರಾಜ್ಯೋತ್ಸವ ಆಚರಿಸುವ ಕನ್ನಡಿಗರ ಮೇಲೆ ಮಾರಣಾಂತಿಕ ದಾಳಿ ನಡೆಸುತ್ತಾರೆ. ಹೀಗಾಗಿ ರಾಜ್ಯೋತ್ಸವ ಆಚರಣೆ ವೇಳೆ ಬಿಗಿಯಾದ ಪೊಲೀಸ್ ಭದ್ರತೆ ಹಾಗೂ ರಕ್ಷಣೆ ಕಲ್ಪಿಸಬೇಕು ಎಂದು ಪೀಠಕ್ಕೆ ತಿಳಿಸಿದರು. ಮಾರಕಾಸ್ತ್ರಗಳೊಂದಿಗೆ ಮೆರವಣಿಗೆ ನಡೆಸಲು ಎಂಇಎಸ್ ಸಮಿತಿಗೆ ಅನುಮತಿ ನೀಡಬಾರದು. ಸರಕಾರ ಹಾಗೂ ಪೊಲೀಸ್ ಇಲಾಖೆಗೆ ಅನುಮತಿ ನೀಡದಂತೆ ನಿರ್ದೇಶಿಸಬೇಕು ಎಂದು ತಿಳಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಬೆಳಗಾವಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಬಿಗಿ ಪೊಲೀಸ್ ಭದ್ರತೆ ಹಾಗೂ ರಕ್ಷಣೆ ಒದಗಿಸಲು ರಾಜ್ಯ ಸರಕಾರ, ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿತು. ಬೆಳಗಾವಿ ನಗರದಲ್ಲಿ ನ್ಯಾಷನಲ್ ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕ್ರೈಮ್ ಕಂಟ್ರೋಲ್ ಕಮೀಷನ್‌ಗೆ ಎಲ್ಲ ರೀತಿಯ ಭದ್ರತೆ ಒದಗಿಸಬೇಕು. ಒಂದು ವೇಳೆ ಯಾರಾದರೂ ರಾಜ್ಯೋತ್ಸವ ಆಚರಣೆಗೆ ಅಡ್ಡಿಪಡಿಸಿದರೆ ಅವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠವು ಮಧ್ಯಂತರ ಆದೇಶ ಹೊರಡಿಸಿ, ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News